ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಸ್ಸಾಂನಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಅಸ್ಥಿರತೆ ಉಂಟಾಗಿತ್ತು. ಆದ್ರೆ ನಾನು ಅಸ್ಸಾಂನಲ್ಲಿ ಅಭಿವೃದ್ಧಿಯ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೇನೆ. ಬಿಜೆಪಿ ಅಸ್ಸಾಂನ ಚಿತ್ರಣವನ್ನೇ ಬದಲಾಯಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಸ್ಸಾಂ ಕೇವಲ 10,000 ಕೋಟಿ ರೂ.ಗಳನ್ನು ತೆರಿಗೆ ಪಾಲಾಗಿ ಪಡೆದುಕೊಂಡಿತ್ತು. ಈಗ ಬಿಜೆಪಿ ಸರ್ಕಾರದ ಅಡಿಯಲ್ಲಿ, ಅದಕ್ಕಿಂತ 5 ಪಟ್ಟು ಹೆಚ್ಚು ಹಣವನ್ನು ಪಡೆಯುತ್ತಿದೆ ಎಂದು ಹೇಳಿದರು.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಈಶಾನ್ಯ ರಾಜ್ಯಗಳ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುವತ್ತ ಹೆಚ್ಚು ಗಮನಹರಿಸಿದೆ. ಈ ಮೂಲಕ ಈ ವರ್ಷ, ಅಸ್ಸಾಂ ತನ್ನ ತೆರಿಗೆ ಪಾಲಾಗಿ ಸುಮಾರು 50,000 ಕೋಟಿ ರೂ.ಗಳನ್ನು ಪಡೆಯಲಿದೆ ಎಂದು ಹೇಳಿದರು.
ಈಶಾನ್ಯ ರಾಜ್ಯಗಳು ಅಷ್ಟಲಕ್ಷ್ಮಿ ದೇವತೆಗಳಿದ್ದಂತೆ, ಅಸ್ಸಾಂನಲ್ಲಿ ಹೆದ್ದಾರಿಗಳು ಮತ್ತು ರಸ್ತೆ ಯೋಜನೆಗಳಿಗೆ ಸಾವಿರಾರು ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ, ಸುಧಾರಿತ ಸಂಪರ್ಕವು ಉದ್ಯೋಗ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಈ ವೇಳೆ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಆ ಘಟನೆಯಲ್ಲಿ ಜೀವ ಕಳೆದುಕೊಂಡ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು.



