ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಕಾರ್ಯವೈಖರಿ ಕುರಿತು ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಲವಾದ ಸಮಸ್ಯೆಗಳನ್ನು ಎತ್ತುವುದು ‘ನಾಟಕವಲ್ಲ’ ಎಂದು ಸ್ಪಷ್ಟಪಡಿಸಿದರು. “ಸಾರ್ವಜನಿಕರಿಗೆ ಅತ್ಯಂತ ಅಗತ್ಯವಿರುವ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ನಾಟಕ” ಎಂದು ಪ್ರಧಾನಿ ಮೋದಿಯವರ ಹೇಳಿಕೆಯನ್ನು ಖಂಡಿಸಿ ಕುಟುಕಿದರು.
ಸಂಸತ್ತು ಇರುವುದು ಯಾವುದಕ್ಕಾಗಿ ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, “ವಿಷಯಗಳ ಬಗ್ಗೆ ಮಾತನಾಡುವುದು, ಸಮಸ್ಯೆಗಳನ್ನು ಎತ್ತುವುದು ನಾಟಕವಲ್ಲ. ಬದಲಿಗೆ ಪ್ರಜಾಪ್ರಭುತ್ವದ ಆಶಯಗಳನ್ನು ನಿರ್ಲಕ್ಷಿಸುವುದು ಮತ್ತು ಚರ್ಚೆಗೆ ಅವಕಾಶ ನೀಡದಿರುವುದೇ ನಿಜವಾದ ‘ನಾಟಕ'” ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಕಾಲೀನ ಸಮಸ್ಯೆಗಳಾದ ಎಸ್ಐಆರ್ ಮತ್ತು ವಾಯುಮಾಲಿನ್ಯದ ಕುರಿತು ಚರ್ಚೆ ನಡೆಯುವುದು ಈ ದೇಶಕ್ಕೆ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು.
ಇದೇ ವೇಳೆ, ಈ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

