ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಗೆ ನೋಟಿಸ್ ನೀಡಿದ್ದರು.ಈ ಹಿನ್ನೆಲೆ ಗಣೇಶ್ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಗೆ ಎಸಿಎಫ್ ವರದಿ ಅನ್ವಯ ನೋಟಿಸ್ ಕೊಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿತ್ತು. ಈ ಬೆನ್ನಲ್ಲೇ ನಟ ಗಣೇಶ್ ಎಚ್ಚೆತ್ತುಕೊಂಡಿದ್ದು, ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.
ವಾಸ ಮತ್ತು ಕೃಷಿ ಉದ್ದೇಶದಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿತ್ತು. ಕಟ್ಟಡ ನಿರ್ಮಾಣಕ್ಕೆ ದೊಡ್ಡ ಗಾತ್ರದ ಕಾಂಕ್ರೀಟ್ ಪಿಲ್ಲರ್ ಗಳನ್ನು ಹಾಕಲಾಗಿದ್ದು, ಜೆಸಿಬಿ ಬಳಕೆ ಮಾಡಲಾಗಿತ್ತು. ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಜಕ್ಕಳ್ಳಿಯಲ್ಲಿ ಒಂದು ಎಕರೆ 24 ಗುಂಟೆ ಜಮೀನಿದ್ದು, ವಾಸದ ಮನೆ ಮತ್ತು ತೋಟಗಾರಿಕೆ ಉದ್ದೇಶದಿಂದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಗಣೇಶ್ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.