ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ನೇತೃತ್ವದಲ್ಲಿ ಶಾಸಕರು, ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹ ಹೇಳಿಕೆಯಾಗಿದೆ. ರಾಷ್ಟ್ರಪತಿಗಳು ಕೂಡಲೇ ಗೃಹ ಸಚಿವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿ, ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಕೆಲ ಕಾರ್ಯಕರ್ತರು ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.