ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣವರ್, ಜಯಂತ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್, ಜಯಂತ್ ಎಂಬವರ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತ ದೂರಿಗೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ಈ ಆರೋಪಿತರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬ್ರಹ್ಮಾವರ ಠಾಣಾ ಪೊಲೀಸ್ ಉಪ ನಿರೀಕ್ಷಕರು ನೀಡಿದ ದೂರಿನಂತೆ ಈ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?
ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ, ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ, ಮೇಲಾಧಿಕಾರಿಯವರ ಸೂಚನೆ ಮೇರೆಗೆ ಆತನನ್ನು ದಸ್ತಗಿರಿ ಮಾಡುವುದಕ್ಕಾಗಿ, ಇಲಾಖಾ ಮೇಲಾಧಿಕಾರಿಗಳು, ಸಿಬ್ಬಂದಿಯೊಂದಿಗೆ ಆ.21ರ ಬೆಳಿಗ್ಗೆ, ಆರೋಪಿಯ ಮನೆಯಾದ ಬೆಳ್ತಂಗಡಿ, ಉಜಿರೆ ಗ್ರಾಮದ ತಿಮರೋಡಿ ಹೌಸ್ ಎಂಬಲ್ಲಿಗೆ ತೆರಳಿದಾಗ, ಅಲ್ಲಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್ ಎಂಬವರುಗಳು ಹಾಗೂ ಇತರ 7 ರಿಂದ 10 ಜನರು ಆರೋಪಿಯನ್ನು ದಸ್ತಗಿರಿ ಮಾಡಲು ತಡೆಯೊಡ್ಡಿದ್ದಾರೆ.

ಸ್ಥಳಕ್ಕೆ ಹೆಚ್ಚಿನ ಜನರನ್ನು ಅಕ್ರಮಕೂಟವಾಗಿ ಸೇರಿಸಿ, ಇಲಾಖಾ ಕರ್ತವ್ಯ ನಿರ್ವಹಿಸದಂತೆ ಬಲಪ್ರಯೋಗ ನಡೆಸಿ ಅಡ್ಡಿಪಡಿಸಿದ್ದಾರೆ. ಇದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಒಡ್ಡಿರುತ್ತಾರೆ. ಆರೋಪಿ ಮಹೇಶ್ ಶೆಟ್ಟಿಯನ್ನು ದಸ್ತಗಿರಿ ಮಾಡಿದ ಬಳಿಕ, ಆತ ಇಲಾಖಾ ಜೀಪಿನಲ್ಲಿ ಬರಲು ನಿರಾಕರಿಸಿ ಆತನ ಖಾಸಗಿ ಕಾರಿನಲ್ಲಿ ಬಂದಿದ್ದು, ಆ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು, ಸುಮಾರು 10 ರಿಂದ 15 ಕಾರುಗಳನ್ನು ಹಿಂಬಾಲಿಸಿಕೊಂಡು ಬಂದು ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಎಂದು ಉಲ್ಲೆಖಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2025, ಕಲಂ: 132,189(2),351(2), 263(a),190,262 BNS – 2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!