ಹೊಸ ದಿಗಂತ ವರದಿ, ಬಳ್ಳಾರಿ:
ಸುಮಾರು ವರ್ಷಗಳ ಇತಿಹಾಸವುಳ್ಳ ರಾಷ್ಟ್ರೀಯ ಪಕ್ಷ ನಮ್ಮದು, ಸಹಜವಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಆಕಾಂಕ್ಷಿಗಳು ಟಿಕೇಟ್ ಗೆ ಅರ್ಜಿ ಸಲ್ಲಿಸಿದ್ದಾರೆ, ಈ ತಿಂಗಳಾಂತ್ಯದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಮಂಗಳವಾರ ಮಾತನಾಡಿದ ಅವರು, ಮಕರ ಸಂಕ್ರಾಂತಿ ಹಬ್ಬದೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೇ, ನಾನಾ ಕಾರಣಗಳಿಂದ ಸಾಧ್ಯವಾಗಿಲ್ಲ, ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದು, ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಜನರು ತುದಿಗಾಲ ಮೇಲೆ ನಿಂತಿದ್ದಾರೆ, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ನಾವಲ್ಲ ಜನರೇ ಹೇಳುತ್ತಿದ್ದು, ಸಹಜವಾಗಿ ಎಲ್ಲ ಕ್ಷೇತ್ರಗಳಲ್ಲಿ ಟಿಕೇಟ್ ಗಾಗಿ ಬೇಡಿಕೆ ಶುರುವಾಗಿದೆ. ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಬಿಜೆಪಿ ಎಷ್ಟೇ ತಿಪ್ಪರಲಾಗ್ ಹಾಕಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವದರಲ್ಲಿ ಅನುಮಾನವೇ ಇಲ್ಲ ಎಂದರು.
ಎಷ್ಟೇ ಪಕ್ಷಗಳು ಹುಟ್ಟಿಕೊಳ್ಳಲಿ ಕಾಂಗ್ರೆಸ್ ಗೆ ಯಾವುದೇ ಸಮಸ್ಯೆ ಎದುರಾಗೋಲ್ಲ, ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆಬರಲಿದೆ, ಪ್ರಜಾಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಸ್ವಂತಪಕ್ಷ ಕಟ್ಟಲು ಅವಕಾಶವಿದೆ. ಅಂತಿಮವಾಗಿ ಜನರೇ ತೀರ್ಮಾನ ಮಾಡಲಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ರಾಜ್ಯದಲ್ಲಿ ಭವಿಷ್ಯವಿಲ್ಲ, ಈ ಹಿಂದೆ ಎಸ್.ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು ಹೊಸ ಪಕ್ಷ ಕಟ್ಟಿದರು, ಕೊನೆಗೆ ಏನಾಯ್ತು, ಅದೇ ರೀತಿ ಗಾಲಿ ಜನಾರ್ಧನ ರೆಡ್ಡಿ ಅವರಪಕ್ಷವೂ ಆಗಲಿದೆ ಎಂದು ಪರೋಕ್ಷವಾಗಿ ಗಾಲಿ ಜನಾರ್ಧನ ರೆಡ್ಡಿ ಅಚರಿಗೆ ಟಾಂಗ್ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಭೀಮಾನಾಯ್ಕ್, ಪಿ.ಟಿ.ಪರಮೇಶ್ವರ್ ನಾಯ್ಕ್, ಮಾಜಿ ಸಚಿವ ಸಂತೋಷ್ ಲಾಡ್, ಬಿ.ವಿ.ಶಿವಯೋಗಿ, ಅಲ್ಲಂ ಪ್ರಶಾಂತ್ ಸೇರಿದಂತೆ ಇತರರಿದ್ದರು.