ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದ ರಾಮದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆ ಕ್ಷೇತ್ರ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಬೊಮ್ಮಾಯಿ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ನಮ್ಮ ರಾಮನಗರದ ಮೇಲೆ ರಾಮನ ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಆಗಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುವ ವಿಶ್ವಾಸವಿದೆ. ಬರುವ ಬಜೆಟ್ನಲ್ಲಿ ಸಿಎಂ ಈ ಯೋಜನೆಗೆ ಸಂಬಂಧಿಸಿದಂತೆ ಅನುದಾನ ಘೋಷಣೆ ಮಾಡಬಹುದು ಎಂದರು.
ಉತ್ತರ ಪ್ರದೇಶ ಸಿಎಂಗೆ ಆಹ್ವಾನ
ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದು, ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನೂ ಆಹ್ವಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ ಎಂದರು. ದಕ್ಷಿಣ ಕರ್ನಾಟಕದಲ್ಲಿ ವಿಶೇಷ ಪಕ್ಷ ಸಂಘಟನೆ ಮಾಡಲು ಅಮಿತ್ ಶಾ ಅವರ ಮಾರ್ಗದರ್ಶನದ ಅವಶ್ಯಕತೆ ಇದೆ. ಹೆಚ್ಚು ಶಾಸಕರು ಆಯ್ಕೆ ಆಗಬೇಕು, ಈ ನಿಟ್ಟಿನಲ್ಲಿ ಶಾ ಅವರು ರಾಜ್ಯಕ್ಕೆ ಬರುತ್ತಿದ್ದಾರೆ ಎಂದರು.