ಹೊಸ ದಿಗಂತ ವರದಿ, ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡಲ ತೀರದಲ್ಲಿ ಡಿಸೆಂಬರ್ 16,17,18 ರಂದು ಕರಾವಳಿ ಉತ್ಸವ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾರ್ಗದರ್ಶನದಂತೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕರಾವಳಿ ಉತ್ಸವದ ರೂಪರೇಶೆಗಳ ಕುರಿತು ಚರ್ಚೆ ನಡೆಸಲಾಯಿತು.
ಶಾಸಕಿ ರೂಪಾಲಿ ನಾಯ್ಕ ಅವರು ಮಾತನಾಡಿ ಕರಾವಳಿ ಉತ್ಸವ ಜಿಲ್ಲೆಯ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮವಾಗಬೇಕು,ಸ್ಥಳೀಯ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶಗಳು ಸಿಗಬೇಕು ಸರ್ಕಾರದಿಂದ ಅಗತ್ಯ ಅನುದಾನ ತರಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.