ಹೊಸ ದಿಗಂತ ವರದಿ, ಶಿವಮೊಗ್ಗ:
ಪದೇ ಪದೇ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದು ಕಂಡುಬರುತ್ತಿದೆ. ಹಾಗಾಗಿ ಇಂತಹ ಆರೋಪಿಗಳು ಜೈಲಿನಿಂದ ಹೊರ ಬಾರದ ಹಾಗೆ ಕಾನೂನು ತಿದ್ದುಪಡಿ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸರ್ಕಾರದ ಕಣ್ಣು ತೆರೆಸಿದೆ. ತಾಂತ್ರಿಕತೆ ಬಳಸಿಕೊಂಡು ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಮಟ್ಟ ಹಾಕುವ ಬಗ್ಗೆ ಯೋಜನೆ ರೂಪಿಸಲಾಗುವುದು. ಪರೀಕ್ಷೆ ಅಕ್ರಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಶೀಘ್ರದಲ್ಲೇ ಪಿಎಸ್ಐ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು. ಇದರ ಬಗ್ಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಿಲ್ಲ. ಈಗಾಗಲೇ ಅಕ್ರಮದಲ್ಲಿ ಸಿಕ್ಕಿ ಬಿದ್ದಿರುವವರಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅವಕಾಶ ಇದೆ. ಪರೀಕ್ಷಾರ್ಥಿಗಳಿಗೆ ಸ್ವಲ್ಪ ಕಷ್ಟ ಆಗಲಿದೆ. ಆದರೆ ಮರು ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ತಿಳಿಸಿದರು.