ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಸ್ಪರ್ಧಿ, ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ.
ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಅವರನ್ನು ಕಾಡುಮನೆ ಎಸ್ಟೇಟ್ ಬಳಿಯ ಆರಾಧ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿದ್ದ ವೇಳೆ ಓಂ ಪ್ರಕಾಶ್ ರಾವ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು ಎನ್ನಲಾಗಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಸ್ತುತ ಅವರ ಆರೋಗ್ಯದ ಕುರಿತು ವೈದ್ಯರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಬಿಗ್ ಬಾಸ್ ಮನೆಯ ವಾತಾವರಣ, ಆಟದ ಒತ್ತಡ ಸೇರಿದಂತೆ ಹಲವು ಒತ್ತಡಗಳಿಂದ ಅವರು ಅಸ್ವಸ್ಥರಾಗಿರಬಹುದು ಎಂಬ ಚರ್ಚೆ ನಡೆಯುತ್ತಿದೆ. ಆದರೆ ಅವರ ಅನಾರೋಗ್ಯಕ್ಕೆ ನಿಖರ ಕಾರಣವೇನು ಎಂಬುದು ವೈದ್ಯಕೀಯ ತಪಾಸಣೆ ಪೂರ್ಣಗೊಂಡ ಬಳಿಕವಷ್ಟೇ ಸ್ಪಷ್ಟವಾಗಲಿದೆ.
ಇದೀಗ ಓಂ ಪ್ರಕಾಶ್ ರಾವ್ ಮತ್ತೆ ಬಿಗ್ ಬಾಸ್ ಮನೆಗೆ ಮರಳುತ್ತಾರಾ ಅಥವಾ ಆರೋಗ್ಯದ ಕಾರಣದಿಂದ ಶೋನಿಂದಲೇ ಹೊರಗುಳಿಯುತ್ತಾರಾ ಎಂಬ ಕುತೂಹಲ ಮೂಡಿದೆ.



