ಹೊಸ ದಿಗಂತ ವರದಿ, ಮೈಸೂರು:
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಫೆ.14 ರಂದು ರಾಜೀನಾಮೆ ನೀಡಿ ಮುಂದಿನ ರಾಜಕೀಯದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.
ಬುಧವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರು ಕಾಂಗ್ರೆಸ್ನಿoದ ಒಬ್ಬೊಬ್ಬರಾಗಿ ಹೊರ ಬರುತ್ತಿದ್ದಾರೆ. ಇದಕ್ಕೆ ಧರ್ಮ ಗುರುಗಳ ಬೆಂಬಲ ಇದೆ. ನಾನು ಪ್ರೇಮಿಗಳ ದಿನವಾದ ಫೆಬ್ರವರಿ 14ರಂದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇನೆ.
ನನ್ನ ಮುಂದೆ ಮೂರು ಆಯ್ಕೆಗಳಿವೆ. ಒಂದು ಜೆಡಿಎಸ್, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಆಗಿದ್ದು, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಫೆಬ್ರವರಿ ಕೊನೆಯ ವಾರ ಅಲ್ಪಅಸಂಖ್ಯಾತರು, ಲಿಂಗಾಯತರು ಹಾಗೂ ಒಕ್ಕಲಿಗರನ್ನು ಸೇರಿಸಿಕೊಂಡು ಅಲಿಂಗ ಸಮಾವೇಶ ನಡೆಸುತ್ತೇವೆ. ಆ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕಾಂಗ್ರೆಸ್ ನನ್ನ ಪಾಲಿಗೆ ಮುಗಿದ ಅಧ್ಯಾಯ. ಅಲ್ಲಿ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಕಾಲ ಮುಗಿದು ಹೋಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕನಸಿನ ಮಾತು. ವಿಪಕ್ಷ ಸಿದ್ಧರಾಮಯ್ಯ ಅಸಹಾಯಕರಾಗಿದ್ದಾರೆ. ಬಾದಾಮಿ ಹಾಗೂ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಗೆಲುವಿಗೆ ನಾವು ಕಾರಣ. ಆದರೆ, ನನಗೆ 19 ಎಂಎಲ್ಸಿಗಳ ಬೆಂಬಲವಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.