ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರತಿಮಾ ಅವರ ಕಾರು ಚಾಲಕನ ವಿಚಾರಣೆ ನಡೆಸಿದ್ದಾರೆ. ಕಾರು ಚಾಲಕ ಕಿರಣ್ ಎಂಬಾತನನ್ನು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿಮಾ ಅವರ ಬಳಿ ಹಲವಾರು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಒಂದು ವಾರದ ಹಿಂದೆ ಪ್ರತಿಮಾ ಆತನನ್ನು ಕೆಲಸದಿಂದ ತೆಗೆಸಿದ್ದರು. ಇದೇ ವಿಚಾರವಾಗಿ ಕಿರಣ್ ಅಸಮಾಧಾನ ವ್ಯಕ್ತಪಡಿಸಿದ್ದ. ಕಿರಣ್ ಬದಲಿಗೆ ಚೇತನ್ ಎಂಬುವರನ್ನು ಪ್ರತಿಮಾ ಚಾಲಕನಾಗಿ ನೇಮಿಸಿಕೊಂಡಿದ್ದರು. ಈ ಹತ್ಯೆ ಬಳಿಕ ಕಿರಣ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಪತ್ತೆ ಮಾಡಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಶನಿವಾರ ರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನ ಮನೆಗೆ ನುಗ್ಗಿ ಗಣಿ ಭೂವಿಜ್ಙಾನ ಇಲಾಖೆ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿತ್ತು. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.