ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಗೆ ಶನಿವಾರ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ, ರಾಜಕಾರಣದ ಚಾಣಾಕ್ಷ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರೊಂದಿಗೆ ಸುಮೂರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸುವ ಮೂಲಕ ಮುಂಬರುವ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸಿದ್ಧರಾಗುವಂತೆ ಸಂದೇಶ ರವಾನಿಸಿದ್ದಾರೆ. ಚುನಾವಣೆಯ ಸಂದರ್ಭವೇ ಜಿಲ್ಲೆಗೆ ಶಾ ಭೇಟಿ ನೀಡಿರುವುದು ಬಿಜೆಪಿ ಪಾಳಯದ ಬಲ ಹೆಚ್ಚಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಮಾಡಿ ಸಚಿವ ಕೆ.ಎಸ್.ಈಶ್ವರಪ್ಪ ಮುಂತಾದವರನ್ನೊಳಗೊಂಡಂತೆ ನಗರದ ಹೊರವಲಯದ ಕೆಂಜಾರಿನ ಶ್ರೀದೇವಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವ್ಯಾಪ್ತಿಯ ಎರಡು ವಿಭಾಗಗಳ ಆರು ಜಿಲ್ಲೆಗಳನ್ನು ಒಳಗೊಂಡಂತೆ 118 ಮಂದಿ ಪ್ರಮುಖರ ಸಭೆ ನಡೆಸಿರುವ ಅಮಿತ್ ಶಾ ಅವರು ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಪ್ರತಿ ಮನೆಯನ್ನು ಕೇಂದ್ರೀಕರಿಸಿ ಪ್ರಚಾರ ಆರಂಭಿಸಬೇಕು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಕಾರ್ಯೋನ್ಮುಖವಾಗುವಂತೆ ಅವರು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿನ ಸದ್ಯದ ರಾಜಕೀಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದ ಅವರು ಬಿಜೆಪಿಗೆ ಅಧಿಕ ಸ್ಥಾನ ಬರುವಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸುವುದರೊಂದಿಗೆ ಮನೆ ಮನೆ ಭೇಟಿಗೆ ಪ್ರಧಾನ ಆದ್ಯತೆ ನೀಡುವಂತೆ ಸಲಹೆ ನೀಡಿದ್ದಾರೆ. ಸರಕಾರದ ಸಾಧನೆಯನ್ನು ಮುಂದಿರಿಸಿ ಜನತೆಯ ಬಳಿ ತೆರಳುವಂತೆ ಅವರು ಸೂಚಿಸಿದ್ದಾರೆ.