ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಧ್ಯಾ ಚಿತ್ರಮಂದಿರದಲ್ಲಿ ‘ಪುಷ್ಪ 2’ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿದ್ದರಿಂದ ಅಭಿಮಾನಿಯೊಬ್ಬರು ಮೃತರಾದ ಘಟನೆ ಇತ್ತೀಚೆಗೆ ನಡೆದಿತ್ತು.
ಅದಕ್ಕೆ ಸಂಬಂಧಿಸಿದಂತೆ ಈಗ ಪ್ರತಿಭಟನೆ ಕೂಡ ನಡೆಯುತ್ತಿದೆ.ನಟ ಅಲ್ಲು ಅರ್ಜುನ್ ಮನೆಯ ಎದುರು ಪ್ರತಿಭಟನೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದ್ದು, ಈ ವೇಳೆ ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.
ಓಯು ಜಎಸಿ ಸಂಘಟನೆಯ ಸದಸ್ಯರು ಜ್ಯುಬಿಲಿ ಹಿಲ್ಸ್ನಲ್ಲಿ ಇರುವ ಅಲ್ಲು ಅರ್ಜುನ್ ನಿವಾಸದ ಎದುರು ಪ್ರತಿಭಟನೆ ಮಾಡಲು ಬಂದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿ ಆಗಿದೆ. ಮನೆಯ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಒಂದೆಡೆ ‘ಪುಷ್ಪ 2’ ಸಿನಿಮಾ ಸೂಪರ್ ಹಿಟ್ ಆಗಿ, 1500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ಖುಷಿ ಅಲ್ಲು ಅರ್ಜುನ್ ಅವರಿಗೆ ಇದೆ. ಆದರೆ ಈ ಖುಷಿಯನ್ನು ಸರಿಯಾಗಿ ಸಂಭ್ರಮಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅಭಿಮಾನಿಯ ಸಾವಿನಿಂದ ಉಂಟಾದ ವಿವಾದ ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.