ಹೊಸ ದಿಗಂತ ವರದಿ, ಶಿವಮೊಗ್ಗ:
ನೂರಕ್ಕೆ ಇನ್ನೂರು ಪರ್ಸೆಂಟ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಎನ್ಇಎಸ್ ಮೈದಾನದಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಾಕ್ರೋಶ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾವು ಅಧಿಕಾರಕ್ಕೆ ಬರುವುದು ಶತಃಸಿದ್ಧ. ನೂರಕ್ಕೆ ನೂರು ಅಧಿಕಾರಕ್ಕೆ ಬಂದೇ ಬರುತ್ತೇವೆ. ನಾವು ಅಕಾರಕ್ಕೆ ಬಂದಾಗ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕೊಡುತ್ತೇವೆ. ಈಗಾಗಲೇ ರಮೇಶ್ ಹೆಗ್ಡೆ ನೇತೃತ್ವದ ಸಮಿತಿ ಮಲೆನಾಡಿನ ರೈತರ ಸಮಸ್ಯೆ ಬಗ್ಗೆ ವರದಿ ನೀಡಿದೆ. ಸಮಸ್ಯೆಗಳಿಗೆ ಮುಂದೆ ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರು ಪರಿಹಾರ ನೀಡಲಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಮಾತು ಕೊಟ್ಟಂತೆ ನಡೆದ ಸರ್ಕಾರ ಎಂದರು.
2013ರಲ್ಲಿ 165 ಭರವಸೆ ನೀಡಿದ್ದೆವು. ಅದರಲ್ಲಿ 157 ಭರವಸೆ ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಹೇಳದೆ ಇದ್ದ 37 ಕಾರ್ಯಕ್ರಮ ಜಾರಿಗೆ ತಂದಿದ್ದೇವೆ. 2018 ರಲ್ಲಿ ಬಿಜೆಪಿ ನೀಡಿದ 600 ಭರವಸೆ ಪೈಕಿ 25 ಭರವಸೆ ಮಾತ್ರ ಈಡೇರಿಸಿದ್ದಾರೆ. 30 ‘ಭರವಸೆ ಅರ್ಧಂಬರ್ಧ ಮಾಡಿದ್ದಾರೆ. ಬೊಮ್ಮಾಯಿ, ಯಡಿಯೂರಪ್ಪ, ಈಶ್ವರಪ್ಪನವರೆ ನಿಮಗೆ ಮಾನ ಮರ್ಯಾದೆ ಇದೆಯಾ. ಜನರಿಗೆ ಮಾಡಿರುವ ದ್ರೋಹ ಇದು. ಕೊಟ್ಟ ಮಾತಿಗೆ ತಪ್ಪಿರುವುದು ಬಿಜೆಪಿ ಎಂದು ಆಕ್ರೋಶ ವ್ಯಕ್ತಪಡಿಸಿದರು.