ತಜ್ಞರೊಂದಿಗೆ ಚರ್ಚಿಸಿದ ನಂತರವಷ್ಟೇ ಕೋವಿಡ್ ನಿರ್ಬಂಧ ಸಡಿಲಿಕೆ ತೀರ್ಮಾನ- ಮುಖ್ಯಮಂತ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಈ ಬಾರಿಯ ಕೋವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ. ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು ಕೋವಿಡ್ ನಿಯಮಗಳನ್ನು ಪಾಲನೆ ಮಾಡಿದರೆ ಅನುಕೂಲವಾಗುತ್ತದೆ ಎಂಬ ಭಾವನೆ ಇದೆ. ತಜ್ಞರು ಇದನ್ನು ಪರಾಮರ್ಶೆ ಮಾಡುತ್ತಿದ್ದು, ಅವರು ಇದೇ ಶುಕ್ರವಾರದ ಸಭೆಯಲ್ಲಿ ಸಂಪೂರ್ಣ ಚಿತ್ರಣವನ್ನು ನಮ್ಮ ಮುಂದೆ ಇಡಲಿದ್ದಾರೆ. ಈ ಬಗ್ಗೆ ಸ್ಪಷ್ಟತೆ ದೊರೆತ ನಂತರ ತೀರ್ಮಾನ ಮಾಡಲಾಗುವುದು ಎಂದರು.

ಡಿಸಿ-ಸಿಇಒಗಳೊಂದಿಗೆ ಸಭೆ:
ನಿನ್ನೆ ಕೋವಿಡ್ ನಿಯಂತ್ರಣ ಹಾಗೂ ಲಸಿಕೆ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗಿದೆ. ಲಸಿಕೆ ನೀಡಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಎರಡೂ ಡೋಸ್ ಹಾಗೂ 15-18 ವರ್ಷ ವಯೋಮಾನದವರಿಗೆ, ಕೊರೋನಾ ಯೋಧರಿಗೆ ಲಸಿಕೆ ನೀಡುವಿಕೆಯನ್ನು ತೀವ್ರ ಗತಿಯಲ್ಲಿ ಹಮ್ಮಿಕೊಳ್ಳಲು ವಿಶೇಷ ಗಮನ ನೀಡಲು ಸೂಚಿಸಲಾಗಿದೆ. ಶೇ. 94ರಷ್ಟು ಜನ ಹೋಮ್ ಐಸೋಲೇಶನ್ ನಲ್ಲಿರುವುದರಿಂದ ಆರೋಗ್ಯ ಇಲಾಖೆ ಗಮನ ನೀಡಿ ಸೋಂಕಿತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಟೆಲಿ ಟ್ರಯಾಜಿಂಗ್ ಹಾಗೂ ಔಷಧ ಕಿಟ್ ಗಳನ್ನು ವಿತರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಪುನಃ ಪ್ರಾರಂಭಿಸಬೇಕು. ಬೂಸ್ಟರ್ ಡೋಸ್ ಗಳನ್ನು ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ, ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಒಪಿಡಿ ಬಲಪಡಿಸಲು ಗಮನ ಹರಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಫೆಬ್ರವರಿಯಲ್ಲಿ ಕೋವಿಡ್ ಪೀಕ್ ತಲುಪುವ ನಿರೀಕ್ಷೆ:
ಬೇರೆ ಬೇರೆ ರಾಜ್ಯಗಳ ಟ್ರೆಂಡ್ ಪರಿಶೀಲಿಸಿರುವ ತಜ್ಞರು, ನಮ್ಮ ರಾಜ್ಯದಲ್ಲಿ ವಿಳಂಬವಾಗಿ ಪ್ರಾರಂಭವಾದ ಅಲೆ ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಏರುಗತಿಯನ್ನು ತಲುಪಬಹುದು ಎಂದು ಅಂದಾಜು ಮಾಡಿದ್ದಾರೆ ಎಂದರು.

ನಿಯಮ ಉಲ್ಲಂಘನೆ:
ಕೋವಿಡ್ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣ ದಾಖಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಯಾವ ಸಂಘ, ಸಂಘಟನೆ ಎಂಬ ಬೇಧಭಾವವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅದರ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದರು.

ಕೋವಿಡ್ ನಿಂದ ಗುಣಮುಖರಾದ ಸಿಎಂ:
11-12 ದಿನಗಳ ಕ್ವಾರಂಟೈನ್ ಅವಧಿ ಮುಗಿದಿದೆ. ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದಿದ್ದು, ಇಂದಿನಿಂದ ದಿನದ ಕೆಲಸ ಕಾರ್ಯಗಳಲ್ಲಿ ತೊಡಗುವುದಾಗಿ ಮುಖ್ಯ ಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!