ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದಿನ ಐಪಿಎಲ್ ಪಂದ್ಯಗಳು ನಡೆಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಇಂದು ರಾಜ್ಯ ಸರ್ಕಾರ ತನ್ನ ಅಧಿಕೃತ ನಿರ್ಧಾರವನ್ನು ಪ್ರಕಟಿಸಲಿದೆ.
ಆರ್ಸಿಬಿ ಮೊದಲ ಬಾರಿಗೆ ಕಪ್ ಗೆದ್ದ ಸಂಭ್ರಮದ ವೇಳೆಯಲ್ಲಿ ನಡೆದ ಕಾಲ್ತುಳಿತ ದುರಂತ ಇಡೀ ಕ್ರೀಡಾ ಪ್ರೇಮಿಗಳನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಯ ನಂತರ ಸುರಕ್ಷತೆಯ ದೃಷ್ಟಿಯಿಂದ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಯನ್ನು ತಡೆಹಿಡಿಯಲಾಗಿತ್ತು. ಘಟನೆಯ ತನಿಖೆ ನಡೆಸಿದ ನಿವೃತ್ತ ನ್ಯಾಯಧೀಶರ ಸಮಿತಿಯು ನೀಡಿದ ಸೂಚನೆಗಳ ಮೇರೆಗೆ, ಕೆಎಸ್ಸಿಎ ಕ್ರೀಡಾಂಗಣದಲ್ಲಿ ಹಲವು ಮೂಲಸೌಕರ್ಯ ಬದಲಾವಣೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
ಜಿಬಿಎ ಮುಖ್ಯ ಆಯುಕ್ತರ ನೇತೃತ್ವದ ಸಮಿತಿಯು ಈಗಾಗಲೇ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೈದಾನದಲ್ಲಿ ಅಳವಡಿಸಲಾದ ಹೊಸ ಸುರಕ್ಷತಾ ಕ್ರಮಗಳ ಕುರಿತಾದ ಸಮಗ್ರ ವರದಿಯನ್ನು ಇಂದು ಗೃಹ ಸಚಿವರಿಗೆ ಸಲ್ಲಿಸಲಾಗುತ್ತದೆ.
ವರದಿ ಸ್ವೀಕರಿಸಿದ ನಂತರ ಸರ್ಕಾರವು ಕೆಎಸ್ಸಿಎ ಮತ್ತು ಆರ್ಸಿಬಿ ಆಡಳಿತ ಮಂಡಳಿಯ ನಿಯೋಗದೊಂದಿಗೆ ಮಹತ್ವದ ಸಭೆ ನಡೆಸಲಿದೆ.
ಈ ಸಭೆಯ ಬಳಿಕ, ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯಗಳ ಆಯೋಜನೆಗೆ ಸರ್ಕಾರ ಅಧಿಕೃತವಾಗಿ ಅನುಮತಿ ನೀಡುವ ಸಾಧ್ಯತೆಯಿದೆ.
ತಮ್ಮ ನೆಚ್ಚಿನ ತಂಡದ ಪಂದ್ಯವನ್ನು ತವರು ಮೈದಾನದಲ್ಲಿ ನೋಡಲು ಕಾತರರಾಗಿರುವ ಆರ್ಸಿಬಿ ಅಭಿಮಾನಿಗಳಿಗೆ ಸರ್ಕಾರದ ಈ ನಿರ್ಧಾರ ಅತ್ಯಂತ ಆಶಾದಾಯಕವಾಗಿದೆ.



