ಹೊಸದಿಗಂತ ಹುಬ್ಬಳ್ಳಿ:
ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೇ ನಡೆಸುವುದನ್ನು ಕಡ್ಡಾಯಗೊಳಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಮ್ಮ ಹಕ್ಕಾಗಿದ್ದು, ಇದಕ್ಕೆ ಅವಕಾಶ ನೀಡದಿದ್ದರೆ ಕನ್ನಡಿಗರಿಗೆ ದೊಡ್ಡ ಮಟ್ಟದ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ಈ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ತಿಳಿಸಿದ ಹೊರಟ್ಟಿ, “ಪ್ರತಿ ರಾಜ್ಯದ ಅಭ್ಯರ್ಥಿಗಳಿಗೆ ಅವರ ಮಾತೃಭಾಷೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಸಿಗಬೇಕು. ಒಂದು ವೇಳೆ ರೈಲ್ವೆ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗದಿದ್ದರೆ, ಮುಂದಿನ ದಿನಗಳಲ್ಲಿ ನಮ್ಮವರು ಕೆಲಸಕ್ಕಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ,” ಎಂದು ಎಚ್ಚರಿಸಿದರು. ಅಲ್ಲದೆ, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಸಚಿವರು ಮತ್ತು ಜನಪ್ರತಿನಿಧಿಗಳ ಧರ್ಮ ಎಂದು ಮಾರ್ಮಿಕವಾಗಿ ನುಡಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಕಲಾಪಗಳ ಕುರಿತು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸದನದಲ್ಲಿ ಬಹಳಷ್ಟು ಸದಸ್ಯರ ನಡವಳಿಕೆಗಳು ಆಶಾದಾಯಕವಾಗಿಲ್ಲ ಮತ್ತು ಶಿಸ್ತುಬದ್ಧವಾಗಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.



