ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಶನಿವಾರ ಚೆನ್ನೈನಲ್ಲಿ ನಡೆದ ಸನಾತನ ನಿರ್ಮೂಲನ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವೊಂದು ವಿಚಾರಗಳನ್ನು ಕೇವಲ ವಿರೋಧಿಸಿದರೆ ಸಾಲದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧ ಮಾಡಬಾರದು. ಅವುಗಳನ್ನು ಶಾಶ್ವತವಾಗಿ ತೊಡೆದುಹಾಕಬೇಕು. ಅದರಂತೆ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಈ ಹೇಳಿಕೆಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಖಂಡಿಸಿದ್ದಾರೆ. ಅವರು ಉದಯನಿಧಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ʼಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಕೆ ಮಾಡಿದ್ದಾರೆ. ಉದಯನಿಧಿ ಸ್ಟಾಲಿನ್ ಅವರ ಅಭಿಪ್ರಾಯವನ್ನು ವಿರೋಧಿಸುವ ಬದಲು ಅವರ ಅಭಿಪ್ರಾಯವನ್ನೇ ನಿರ್ಮೂಲನೆ ಮಾಡಬೇಕು. ಅವರು ಸನಾತನ ಧರ್ಮವನ್ನು ಅನುಸರಿಸುವ ದೇಶದ ಶೇ.80ರಷ್ಟು ಜನರ ಹತ್ಯೆಗೆ ಕರೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ಮತ್ತೊಂದೆಡೆ ವಿವಾದದ ಬಳಿಕ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, ‘ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಕಾನೂನು ಹೋರಾಟ ಸೇರಿ ಯಾವುದೇ ಹೋರಾಟಕ್ಕೂ ನಾನು ಸಿದ್ಧನಿದ್ದೇನೆ’ ಎಂದು ತಿಳಿಸಿದ್ದಾರೆ.