ಹೊಸ ದಿಗಂತ ವರದಿ, ಅಂಕೋಲಾ:
ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ ಅವರಿಗೆ ಸ್ಟಂಟ್ ಅಳವಡಿಸಲಾಗಿದ್ದು ಸುಕ್ರಜ್ಜಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸುಕ್ರಜ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದ್ದು ಬೇಗ ಅವರನ್ನು ವಾರ್ಡಿಗೆ ಸ್ಥಳಾಂತರಿಸುವುದಾಗಿ ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ಸುಕ್ರಜ್ಜಿ ಅವರ ಸಂಬಂಧಿಗಳಿಂದ ದೊರಕಿದೆ.
ಕಳೆದ ಸುಮಾರು ಒಂದು ವರ್ಷದಿಂದ ಉಸಿರಾಟದ ತೊಂದರೆ ಯಿಂದ ಆಗಾಗ ಕಾರವಾರ ಆಸ್ಪತ್ರೆಗೆ ದಾಖಲಾಗುತ್ತಿದ್ದ ಸುಕ್ರಿ ಗೌಡ ಅವರ ಆರೋಗ್ಯದಲ್ಲಿ ತೀವ್ರ ತೊಂದರೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರನ್ನು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು.
ಹೃದಯದ ಸಮಸ್ಯೆ ಇರುವುದು
ಪರೀಕ್ಷೆಯಲ್ಲಿ ದೃಡಪಟ್ಟಿದ್ದರಿಂದ ಹೃದಯ ರೋಗ ತಜ್ಞ ವೈದ್ಯರ ತಂಡ ಸುಕ್ರಜ್ಜಿ ಹೃದಯಕ್ಕೆ ಸ್ಟಂಟ್ ಅಳವಡಿಸುವ ಕಾರ್ಯವನ್ನು ರವಿವಾರ ಯಶಸ್ವಿಯಾಗಿ ಮುಗಿಸಿದ್ದಾರೆ.