ಹೊಸ ದಿಗಂತ ವರದಿ, ಚಿತ್ರದುರ್ಗ :
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಸಂದರ್ಭದಲ್ಲಿ ನೀಡಲಾಗುವ ಕಾಯಕಯೋಗಿ “ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿ”ಗೆ ಪ್ರಸಕ್ತ ವರ್ಷ ಸಾಣೇಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖಾಮಠ ಪೀಠಾಧ್ಯಕ್ಷರಾದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ತಮ್ಮ ಪರಿಶ್ರಮ, ಜನಪರ ಕಾಳಜಿ, ವೈಚಾರಿಕತೆ, ರಂಗಾಸಕ್ತಿ ಹಾಗೂ ಸಾಹಿತ್ಯ ಕೃಷಿ ಮತ್ತು ಸಾಂಸ್ಕೃತಿಕ ಒಲವುಗಳ ಮೂಲಕ ಅವರು ಜನಮಾನಸದಲ್ಲಿ ಮನೆ ಮಾಡಿದ್ದಾರೆ. ಅವರು ಜೀವನಾದರ್ಶಗಳನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಡಾ. ಮಲ್ಲಿಕಾಘಂಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ.
ಪ್ರಶಸ್ತಿ ೫ ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಜನವರಿ ೧೪ ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ‘ಸಿದ್ಧರಾಮ ಜಯಂತಿ’ಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.