ಹೊಸದಿಗಂತ ವರದಿ ಮಡಿಕೇರಿ:
ಅಪ್ರಾಪ್ತ ಬಾಲಕನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪದ ಮೇಲೆ ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವೀರಾಜಪೇಟೆ ನ್ಯಾಯಾಲಯವು ಕಾರಿನ ಮಾಲಕರಿಗೆ 25,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಸಂತೆ ದಿನವಾದ ಭಾನುವಾರ, ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿದ್ದು, ಪೊಲೀಸರನ್ನು ಕಂಡು ಅಂಗಡಿಗೆ ಡಿಕ್ಕಿ ಪಡಿಸಿದ್ದ. ಈ ಸಂಬಂಧ ಪೋಷಕರ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ವೀರಾಜಪೇಟೆ ಜೆಎಂಎಫ್’ಸಿ ನ್ಯಾಯಾಲಯವು ಮೋಟಾರು ವಾಹನ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪೋಷಕರಿಗೆ 25,000 ರೂ.ದಂಡ ವಿಧಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಅವರು, ನಿಮ್ಮ ಅಪ್ರಾಪ್ತ ಮಕ್ಕಳಿಗೆ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ನೀಡಬೇಡಿ. ಒಂದು ವೇಳೆ ನೀಡಿದಲ್ಲಿ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಚ್ಚರಿಸಿದ್ದಾರೆ.



