ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ 48 ದಿನಗಳ ಮಂಡಲೋತ್ಸವ ಪೂರ್ಣಗೊಳಿಸಿ ಆಗಮಿಸಿದ ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ
ಟ್ರಸ್ಟ್ನ ಟ್ರಸ್ಟಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಅದ್ಧೂರಿಯಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.
ವಿಶ್ವಹಿಂದು ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, ಶಾಸಕರಾದ ವೇದವ್ಯಾಸ ಕಾಮತ್, ಯಶ್ಪಾಲ್ ಸುವರ್ಣ ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಶ್ರೀಗಳನ್ನು ಜಿಲ್ಲೆಗೆ ಬರಮಾಡಿಕೊಂಡರು.
ಈ ವೇಳೆ ಆಶೀರ್ವಚನ ನೀಡಿದ ಪೇಜಾವರ ಸ್ವಾಮೀಜಿ, ಅಯೋಧ್ಯೆಯಲ್ಲಿ ಶ್ರೀರಾಮನ ಸೇವೆ ಮಾಡುವ ಅವಕಾಶ ದೊರೆತಿರುವುದು ದೊಡ್ಡ ಸುಯೋಗ. ಕೃಷ್ಣೈಕ್ಯರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿಯವರು ನಮಗೆ ಈ ಭಾಗ್ಯ ಕರುಣಿಸಿದ್ದಾರೆ. ಶ್ರೀ ರಾಮನ ನೆಲದಲ್ಲಿ ಮಾಡಿದ ಸೇವೆ ಕೃಷ್ಣನಿಗೆ ಸಮರ್ಪಣೆ ಎಂದು ಹೇಳಿದರು.
ಅಯೋಧ್ಯೆ ರಾಮ ಮಂದಿರ ಸಂಪೂರ್ಣವಾಗಲು ಇನ್ನೂ 2 ವರ್ಷ ಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕಾಲದಲ್ಲಿ ಇಂತಹ ಬೆಳವಣಿಗೆ ಕಾಣುತ್ತಿದ್ದೇವೆ. ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲ ನೆಲೆಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ. ಅಯೋಧ್ಯೆಯಲ್ಲಿ ಇದ್ದಾಗ ದೂರದ ಉತ್ತರ ಪ್ರದೇಶದಲ್ಲಿ ಇದ್ದೇವೆ ಅನಿಸಲಿಲ್ಲ. ರಾಮನ ಸಾನಿಧ್ಯದೊಂದಿಗೆ ರಾಮ ಭಕ್ತರ ಸಾನಿಧ್ಯವಿತ್ತು. ಕರ್ನಾಟಕದಿಂದ, ದಕ್ಷಿಣ ಭಾರತದ ರಾಜ್ಯಗಳಿಂದ ನಿರಂತರವಾಗಿ ಭಕ್ತರು ಬರುತ್ತಿದ್ದರು ಎಂದು ಸ್ವಾಮೀಜಿ ಹೇಳಿದರು.