‘ಯಕ್ಷರಂಗದ ರಾಜ’ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಸರಾಂತ ಯಕ್ಷಗಾನ ಕಲಾವಿದ “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ನಿಧನರಾಗಿದ್ದಾರೆ.

ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.

ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.

ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!