ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಎಫ್ಐಆರ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಸುಪ್ರೀಂಕೋರ್ಟ್ನಿಂದ ತಡೆಯಾಜ್ಞೆ ಸಿಕ್ಕಿದ್ದು, ಸದ್ಯ ಸಿಎಂಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೂ ತಡೆಯಾಜ್ಞೆ ನೀಡಿರುವ ಕೋರ್ಟ್, ಪ್ರತಿವಾದಿಗಳಿಗೆ ಆರು ವಾರಗಳಲ್ಲಿ ಉತ್ತರ ನೀಡಲು ಸೂಚನೆ ನೀಡಿದೆ. ಸುಪ್ರೀಂಕೋರ್ಟ್ನ ಜಸ್ಟೀಸ್ ಋಷಿಕೇಶ್ ರಾಯ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸಿಎಂ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ ವಾದ ಮಂಡಿಸಿದ್ದರು.
2020ರ ಪ್ರಕರಣ ಇದಾಗಿದ್ದು, ಸಾರ್ವಜನಿಕ ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರೋರ್ವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು.
ಈ ಸಂಬಂಧ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಯೂ ಆಗಿರುವ ರಣದೀಪ್ ಸುರ್ಜೆವಾಲಾ ಅವರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿ, ವಿಚಾರಣೆಗೆ ಹಾಜರಾಗುವಂತೆ ಫೆ.6ರಂದು ತೀರ್ಪು ನೀಡಿತ್ತು.