ಹೊಸದಿಗಂತ ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೋರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ ಅವರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ವಿವಿಧ ಸಂಘಟನೆಗಳು ಆರೋಪಿಸಿವೆ.
ಫೆಬ್ರವರಿ ತಿಂಗಳಿಂದಲೇ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಮತ್ತು ಉಪವಾಸ ಸತ್ಯಾಗ್ರಹದ ಬಗ್ಗೆ ಮುನ್ಸೂಚನೆ ನೀಡಿದ್ದರೂ, ಜಿಲ್ಲಾಧಿಕಾರಿಗಳು ಸೌಜನ್ಯಕ್ಕೂ ಸ್ಥಳಕ್ಕೆ ಭೇಟಿ ನೀಡಿಲ್ಲ ಹಾಗೂ ವೈದ್ಯಕೀಯ ನೆರವು ನೀಡಿಲ್ಲ ಎಂದು ಮುಖಂಡರು ದೂರಿದ್ದಾರೆ.
5 ದಿನಗಳ ಕಾಲ ಉಪವಾಸ ಕುಳಿತಿದ್ದ ತಿಪ್ಪೇಸ್ವಾಮಿ ಅವರು ಮನೆಗೆ ತೆರಳುವಾಗ ಕುಸಿದು ಬಿದ್ದಿದ್ದು, ಪ್ರಸ್ತುತ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆಗಾಗಿ ಈಗಾಗಲೇ 20 ಲಕ್ಷಕ್ಕೂ ಅಧಿಕ ವೆಚ್ಚವಾಗಿದೆ. ರೈತ ನಾಯಕನ ಈ ಸ್ಥಿತಿಗೆ ನೇರ ಹೊಣೆಯಾದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಮತ್ತು ಸರ್ಕಾರದ ವತಿಯಿಂದಲೇ ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ರೈತ ಸಂಘ, ಕನ್ನಡಪರ ಸಂಘಟನೆಗಳು ಹಾಗೂ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.



