ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು (ಮಾರ್ಚ್ 12) ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಕಡಿಮೆ ಮಾಡುತ್ತದೆ.
ಮಂಡ್ಯಕ್ಕೆ ಪ್ರಧಾನಮಂತ್ರಿಯವರ ಭೇಟಿಯ ಕುರಿತು ಮಾಹಿತಿ ನೀಡಿದ ಪ್ರಧಾನಮಂತ್ರಿ ಕಾರ್ಯಾಲಯವು, “ಮೂಲಸೌಕರ್ಯ ಯೋಜನೆಗಳ ತ್ವರಿತ ಗತಿಯು ದೇಶಾದ್ಯಂತ ವಿಶ್ವ ದರ್ಜೆಯ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಪ್ರಧಾನ ಮಂತ್ರಿಯವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಈ ಪ್ರಯತ್ನದಲ್ಲಿ ಪ್ರಧಾನಿಯವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದಿದೆ.
ಜೊತೆಗೆ ಮೈಸೂರು-ಕುಶಾಲನಗರ 4 ಪಥದ ಹೆದ್ದಾರಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ. 92 ಕಿಮೀ ವ್ಯಾಪಿಸಿರುವ ಈ ಯೋಜನೆಯನ್ನು ಸುಮಾರು 4130 ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯು ಬೆಂಗಳೂರಿನೊಂದಿಗೆ ಕುಶಾಲನಗರದ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಪ್ರಯಾಣದ ಸಮಯವನ್ನು ಸುಮಾರು 5 ರಿಂದ ಕೇವಲ 2.5 ಗಂಟೆಗಳವರೆಗೆ ಅರ್ಧಕ್ಕೆ ಇಳಿಸಲು ಸಹಾಯ ಮಾಡುತ್ತದೆ.
ಇದಕ್ಕೂ ಮುನ್ನ ನಿತಿನ್ ಗಡ್ಕರಿ ಈ ರಸ್ತೆ ಬಗ್ಗೆ ಟ್ವೀಟ್ ಮಾಡಿದ್ದು, “#ಬೆಂಗಳೂರು_ಮೈಸೂರು_ಎಕ್ಸ್ಪ್ರೆಸ್ವೇ ನಿರ್ಮಾಣವು NH-275ರ ಭಾಗವಾಗಿದ್ದು, ಇದು ನಾಲ್ಕು ರೈಲು ಮೇಲ್ಸೇತುವೆಗಳು, ಒಂಬತ್ತು ಮಹತ್ವದ ಸೇತುವೆಗಳು, 40 ಸಣ್ಣ ಸೇತುವೆಗಳು ಮತ್ತು 89 ಅಂಡರ್ಪಾಸ್ಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಬರೆದಿದ್ದಾರೆ.
ಪ್ರತ್ಯೇಕ ಟ್ವೀಟ್ನಲ್ಲಿ, ಈ ಸಂಪರ್ಕ ಯೋಜನೆಯು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. “ಈ ಮಹತ್ವಾಕಾಂಕ್ಷೆಯ ಯೋಜನೆಯು ಶ್ರೀರಂಗಪಟ್ಟಣ, ಕೂರ್ಗ್, ಊಟಿ ಮತ್ತು ಕೇರಳದಂತಹ ಪ್ರದೇಶಗಳಿಗೆ ಪ್ರವೇಶವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದರಿಂದಾಗಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಎಕ್ಸ್ಪ್ರೆಸ್ ವೇ ಮಾತ್ರವಲ್ಲದೆ, ಪ್ರಧಾನಿಯವರು ಸುಮಾರು 16,000 ಕೋಟಿ ರೂಪಾಯಿಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.