ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಯ ಮದ್ದೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಲೆ ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದ ಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರಿಗೆ ಹೋಗುವ ವಾಹನಗಳು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ನಗರದಿಂದ ಮೈಸೂರಿಗೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು ಬನ್ನೂರು ಮೂಲಕ ಮೈಸೂರಿಗೆ ವಾಹನಗಳು ತೆರಳಬಹುದಾಗಿದೆ. ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಬಹುದಾಗಿದೆ.
ಮಂಡ್ಯಕ್ಕೆ ಆಗಮಿಸಿದ ವಿಶೇಷ ಭದ್ರತಾ ಎಸ್ಪಿಜಿ ತಂಡ
ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಗೆ ವಿಶೇಷ ಭದ್ರತಾ ಎಸ್ಪಿಜಿ ತಂಡ ಆಗಮಿಸಿದೆ. ಸಮಾವೇಶ ನಡೆಯುವ ಸ್ಥಳ, ಪಾರ್ಕಿಂಗ್ ಸ್ಥಳ, ಮೋದಿ ಬರುವ ಮಾರ್ಗ ಪರಿಶೀಲನೆ ಮಾಡಲಾಯಿತು. ಬಳಿಕ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಹಾಗೂ ಮಂಡ್ಯ ಎಸ್ಪಿಎನ್.ಯತೀಶ್ ಜೊತೆ ಸಭೆ ಮಾಡಿದ ಎಸ್ಪಿಜಿ ತಂಡ ಕಾರ್ಯಕ್ರಮದ ಮಾಹಿತಿ ಪಡೆದುಕೊಂಡರು.
ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ
ಬೆಂಗಳೂರು-ಮೈಸೂರು ಹೈವೇಯನ್ನು ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. 16 ಎಕರೆ ವಿಸ್ತೀರ್ಣದಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ.
ಸಮಾವೇಶ ನಡೆಯುವ ಸ್ಥಳಕ್ಕೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಎಡಿಜಿಪಿ ಅಲೋಕ್ ಕುಮಾರ್ ಕೂಡ ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಎಸ್ಪಿಜಿ ಟೀಂ ಸಮಾವೇಶದ ಸ್ಥಳ ಪರಿಶೀಲನೆ ಮಾಡಲಿದೆ. ಪಾರ್ಕಿಂಗ್ ವ್ಯವಸ್ಥೆ, ವೇದಿಕೆ ಪ್ರಧಾನಿ ಸಂಚರಿಸುವ ಮಾರ್ಗ ಪರಿಶೀಲನೆ ಮಾಡಿ ಎಸ್ಪಿ, ಡಿಸಿ ಜೊತೆ ಸಭೆ ನಡೆಸಲಿದೆ.