ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಆಯೋಜಿಸಲಾಗಿರುವ ವಿಶ್ವ ಆಹಾರ ಭಾರತ 2023 ಮೇಳವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಉದ್ಘಾಟಿಸಲಿದ್ದಾರೆ.
ಭಾರತೀಯ ಆಹಾರ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ನ.3 ರಿಂದ 5ರ ವರೆಗೆ ಅಂದರೆ ಮೂರು ದಿನಗಳ ಕಾಲ ನವದೆಹಲಿಯ ಪ್ರಗತಿ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದರಲ್ಲಿ 200ಕ್ಕೂ ಹೆಚ್ಚು ಬಾಣಸಿಗರು ಭಾಗವಹಿಸಲಿದ್ದು, ಸಾಂಪ್ರದಾಯಿಕ ಭಾರತೀಯ ಪಾಕಪದ್ಧತಿಯನ್ನು ಪ್ರಸ್ತುತಪಡಿಸಲಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸ್ವಸಹಾಯ ಗುಂಪುಗಳನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿಯವರು ಒಂದು ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಬೀಜ ಬಂಡವಾಳ ಸಹಾಯ ಧನವನ್ನು ವಿತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಸುಮಾರು 88 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜತೆಗೆ 6 ದೇಶಗಳ ಸಚಿವರು ಕೂಡ ಆಗಮಿಸಲಿದ್ದಾರೆ. ವಿವಿಧ ದೇಶಗಳ 1200ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ.
ಇದು ಜಾಗತಿಕ ಮಟ್ಟದಲ್ಲಿ ಅತ್ಯಂತ ಮಹತ್ವದ ಕಾರ್ಯಕ್ರಮ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಾಸ್ ಹೇಳಿದ್ದಾರೆ.