ಮೈಸೂರಿಗೆ ಪ್ರಧಾನಿ ಆಗಮನ; ಸಚಿವ ಎಸ್.ಟಿ.ಸೋಮಶೇಖರ್ ರಿಂದ ಸ್ಥಳ ಪರಿಶೀಲನೆ

ಹೊಸದಿಗಂತ ವರದಿ, ಮೈಸೂರು:
ಕಳೆದ ಮೂರು ವರ್ಷಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಈ ಸಂವಾದ ಕಾರ್ಯಕ್ರಮವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ವೇದಿಕೆ ನಿರ್ಮಾಣ, ಗಣ್ಯರು, ಫಲಾನುಭವಿಗಳಿಗೆ ಆಸನದ ವ್ಯವಸ್ಥೆ, ಭದ್ರತೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಾಲ್ಕು ಜಿಲ್ಲೆಗಳ‌ ಫಲಾನುಭವಿಗಳನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲೂ ಲೋಪವಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರಿನ ಜನತೆ ಪರವಾಗಿ ಸ್ವಾಗತ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದು ಯಾವುದೇ ಲೋಪ, ಕೊರತೆ ಆಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದರು.
ಅರಮನೆ ಆವರಣದಲ್ಲಿ ಯೋಗ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಆಗುವ ಬಗ್ಗೆ ಕೇಂದ್ರ ಸರ್ಕಾರವೇ ತೀರ್ಮಾನ ಕೈಗೊಂಡಿದೆ. ಆನ್ ಲೈನ್ ನಲ್ಲಿ ನೋಂದಣಿ ಮಾಡಬಹುದು. ಕೇಂದ್ರದ ನಿರ್ದೇಶನದ ಅನುಸಾರ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಆದವರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

ಕಾನೂನಿಗೆ ಬದ್ಧವಾಗಿದ್ದರೆ ಹೆದರಿಕೆ ಏಕೆ?
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಇ.ಡಿ. ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇ.ಡಿ. ತನಿಖೆಗೆ ಒಳಪಡುವವರು ಕಾನೂನು ಬದ್ಧವಾಗಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದರು.
ಅಕ್ರಮ ಮಾಡಿದವರಿಗೆ ಭಯ ಇರುತ್ತದೆ. ಸರಿಯಿದ್ದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಯಾರಿಗೂ ತೊಂದರೆ ಆಗಲ್ಲ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಕರ್ನಾಟಕದಲ್ಲಿ ಎಷ್ಟು ಜನರ ವಿಚಾರಣೆ ಮಾಡಿಲ್ಲ? ಎಂದು ಹೇಳಿದರು.
ಈ‌ ಸಂದರ್ಭದಲ್ಲಿ ಶಾಸಕ ಎಸ್.ಎ. ರಾಮದಾಸ್, ಮೇಯರ್ ಸುನಂದಾ ಪಾಲನೇತ್ರಾ, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಎಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!