ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಒಕೆ ಭಾರತದಲ್ಲಿ ವಿಲೀನಗೊಳ್ಳಬೇಕು ಹಾಗೂ ಜಗತ್ತನ್ನು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ನ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.
ಈಗ ಜಗತ್ತನ್ನು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಮುಕ್ತಗೊಳಿಸುವ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಜಿಹಾದಿಗಳ ಹಿಡಿತದಿಂದ ಮುಕ್ತಗೊಳಿಸಿ ಭಾರತದೊಂದಿಗೆ ವಿಲೀನಗೊಳಿಸುವ ಸಮಯ ಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸರ್ಕಾರ ತೆಗೆದುಕೊಂಡ ಕಠಿಣ ರಾಜತಾಂತ್ರಿಕ ಕ್ರಮಗಳು ಪಾಕಿಸ್ತಾನವನ್ನು ವಿಶ್ವದಲ್ಲಿ ಏಕಾಂಗಿಯಾಗಿ ಮಾಡಿದೆ ಎಂದರು.
ಪಾಕಿಸ್ತಾನ ಸೇರಿದಂತೆ ಇಡೀ ಜಗತ್ತಿನಲ್ಲಿರುವ ಯಾವುದೇ ಭಾರತ ವಿರೋಧಿ ರಚನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಾಮರ್ಥ್ಯ ಭಾರತಕ್ಕಿದೆ. ಈಗ ಪಾಕಿಸ್ತಾನ ತನ್ನ ದುಷ್ಕೃತ್ಯಗಳಿಗೆ ಶಿಕ್ಷೆಯನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.