ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನೇ ಪ್ರಶ್ನಿಸಿ, ಅವು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ಕಾಯಿನ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಹಾಗೂ ಅವರ ಪುತ್ರರ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಇಷ್ಟು ದಿನ ಯಾವುದೇ ಕ್ರಮ ಕೈಗೊಳ್ಳದ ಸಂಸ್ಥೆಗಳು ಈಗ ಏಕಾಏಕಿ ದಾಳಿ ನಡೆಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು. ಆರೋಪಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡದೇ ದಾಳಿ ನಡೆಸುವುದೇನು ಎಂಬ ಪ್ರಶ್ನೆಯನ್ನೂ ಎತ್ತಿದರು.
ಇದನ್ನೂ ಓದಿ:
ಇಡಿ, ಆದಾಯ ತೆರಿಗೆ ಇಲಾಖೆ ಮತ್ತು ಸಿಬಿಐ ಸಂಸ್ಥೆಗಳು ರಾಜಕೀಯ ಪ್ರೇರಿತವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಗಂಭೀರ ಆರೋಪ ಮಾಡಿರುವ ಖರ್ಗೆ, ಈ ಸಂಸ್ಥೆಗಳ ಕ್ರಮಗಳಲ್ಲಿ ಪಾರದರ್ಶಕತೆ ಕೊರತೆಯಿದೆ ಎಂದು ಟೀಕಿಸಿದರು. ಆರೋಪ ಸಾಬೀತಾಗುವ ಪ್ರಮಾಣ ಬಹಳ ಕಡಿಮೆ ಇದ್ದರೂ, ದಾಳಿಗಳ ಮೂಲಕ ರಾಜಕೀಯ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.
ಇನ್ನೊಂದೆಡೆ, ಶಾಸಕ ಹ್ಯಾರಿಸ್ ಪುತ್ರರಾದ ಮೊಹಮ್ಮದ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.



