ಕಳಪೆ ಗುಣಮಟ್ಟದ ರಸಗೊಬ್ಬರ- ಬೀಜ ಮಾರಾಟ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ: ಸಚಿವ ಚವ್ಹಾಣ್

ಹೊಸದಿಗಂತ ವರದಿ, ಯಾದಗಿರಿ :

ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರ ಮತ್ತು ಬೀಜ ಮಾರಾಟದ ಬಗ್ಗೆ ನಿಯಂತ್ರಣ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಮತ್ತು ಪಶು ಸಂಗೋಪನೆ ಖಾತೆ ಸಚಿವರಾದ ಪ್ರಭು ಬಿ ಚವ್ಹಾಣ್ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದಅವರು ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರ ಮತ್ತು ಬೀಜ ಮಾರಾಟವಾಗುತ್ತಿರುವ ಬಗ್ಗೆ ಗಮನಿಸಿ ತೆಲಂಗಾಣ ಪೋಲಿಸರು ಯಾದಗಿರಿಗೆ ಬಂದು ತಪ್ಪಿತಸ್ಥರನ್ನು ಬಂಧನ ಮಾಡಿರುವ ಸಂಗತಿ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರ, ಬೀಜ ಮಾರಾಟ, ಡಿಎಪಿ ಜೊತೆ ಜಿಂಕ್ ,ಕಡ್ಡಾಯವಾಗಿ ರೈತರಿಗೆ ಮಾರಾಟ ಸೇರಿದಂತೆ ಸಕಾಲಕ್ಕೆ ರೈತರಿಗೆ ರಸಗೊಬ್ಬರ, ಬೀಜ ಲಭ್ಯವಾಗಿಲ್ಲದ ಬಗ್ಗೆ ಸುರಪುರ ಶಾಸಕ ರಾಜುಗೌಡ ( ನರಸಿಂಹ ನಾಯಕ) ಅವರು ತಿಳಿಸಿದ್ದು, ಕೃಷಿ ಜಂಟಿ ನಿರ್ದೇಶಕರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ತಾಲೂಕಾವಾರು ಸ್ಟಾಕ್ ಇರುವ ಬಗ್ಗೆ ಖಾತ್ರಿಪಡಿಸಿಕೊಂಡು ರೈತರಿಗೆ ನೆರವಾಗುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೊಳ್ಳಬೇಕು. ಪ್ರತಿ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡುವ ಜೊತೆಗೆ ಗರ್ಭಿಣಿ ಮಹಿಳೆಯರಿಗೆ ಔಷಧೀಯ ಮತ್ತು ಗುಣಮಟ್ಟದ ಚಿಕಿತ್ಸೆ ಒದಗಿಸಬೇಕು. ತಾಲೂಕಾವಾರು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅವಶ್ಯಕ ಕ್ರಮ ಕೈಗೊಳ್ಳಬೇಕು. ನೋಂದಣಿ ಯಾಗದೇ ಮನೆಗಳಲ್ಲಿಯೇ ಖಾಸಗೀ ಆಸ್ಪತ್ರೆಯೆಂದು ನಡೆಸುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಣ ವ್ಯವಸ್ಥೆ ಇನ್ನಷ್ಟು ಸುಧಾರಿಸಲು ಅನುಕೂಲವಾಗುವಂತೆ ಯಾದಗಿರಿ ಜಿಲ್ಲೆಯಿಂದ ಇತರ ಜಿಲ್ಲೆಗಳಿಗೆ ನಿಯೋಜನೆ ಮೇಲೆ ನೇಮಿಸಿರುವಂತಹ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ತಕ್ಷಣ ಕೇಂದ್ರಸ್ಥಾನಕ್ಕೆ ವಾಪಸ್ ಕರೆಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಿದರು.

ಅದರಂತೆ ಜಿಲ್ಲೆಯ ಪ್ರತಿ ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು, ಕಾಂಪೌಂಡ್, ಶೌಚಾಲಯ, ಕ್ರೀಡಾಂಗಣದ ವ್ಯವಸ್ಥೆ ಇರಬೇಕು. ನೂತನ ಕಟ್ಟಡಗಳ ಅವಶ್ಯಕತೆ ಹಾಗೂ ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸಮೀಕ್ಷೆ ನಡೆಸಿ ಬೇಡಿಕೆಯನ್ನು ಪರಿಶೀಲಿಸುವಂತೆ ತಿಳಿಸಿದ ಅವರು ಅತಿಥಿ ಶಿಕ್ಷಕರ ಅವಶ್ಯಕತೆ ಬಗ್ಗೆ ಮಾಹಿತಿ ನೀಡಬೇಕು. ಆಯಾ ಶಾಲೆಗಳಲ್ಲಿ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಿರುವಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಕನಿಷ್ಠ ಏಳು ಗಂಟೆ ವಿದ್ಯುತ್ ಸರಬರಾಜು ಆಗಬೇಕು. ವಿದ್ಯುತ್ ಓವರ್ ಲೋಡ್ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ವಿದ್ಯುತ್ ಸಂಪರ್ಕ ತಕ್ಷಣ ಕಲ್ಪಿಸಬೇಕು. ಯಾದಗಿರಿ, ಶಹಾಪುರ, ಸುರಪುರ ಮತ್ತು ಇತರೆ ತಾಲ್ಲೂಕು ಕೇಂದ್ರಗಳಲ್ಲಿನ ಮುಖ್ಯ ರಸ್ತೆಗಳಲ್ಲಿ ವಿದ್ಯುತ್ ದೀಪ ಕಡ್ಡಾಯವಾಗಿ ಅಳವಡಿಸುವಂತೆ ಸೂಚನೆ ನೀಡಿದರು.

ನಿರ್ಮಿತಿ ಕೇಂದ್ರ, ಪಿ ಆರ್ .ಇ .ಡಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ , ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡವಾರು ಸ್ವಚ್ಚತೆ, ರಸ್ತೆಗಳ ದುರಸ್ತಿ, ವಿದ್ಯುತ್ ದೀಪಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾದಗಿರಿ ನಗರದ ಮುಖ್ಯ ರಸ್ತೆಗಳಲ್ಲಿ ಎಲ್ಇಡಿ ವಿದ್ಯುತ್ ದೀಪ ಅಳವಡಿಸಬೇಕು. ಪುಣ್ಯಕೋಟಿ ದತ್ತು ಯೋಜನೆಯಡಿ ಗೋವುಗಳನ್ನು ದತ್ತು ಪಡೆಯಬೇಕು ಎಂದು ಮನವಿ ಮಾಡಿದ ಅವರು ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅನಧಿಕೃತ ಮತ್ತು ನಿಗಧಿಗಿಂತ ಹೆಚ್ಚಿನ ಪ್ರಮಾಣದ ಮರಳು ಸಾಗಾಣಿಕೆ ವಾಹನಗಳನ್ನು ನಿಯಂತ್ರಿಸಬೇಕು. ವಿವಿಧ ವಸತಿ ನಿಲಯಗಳ ಸ್ವಚ್ಚತೆ ಮತ್ತು ಗುಣಮಟ್ಟದ ಆಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಗ್ರಾಮವಾರು ಸ್ವಚ್ಚತೆ, ಚರಂಡಿ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಸ್ಮಶಾನ ಭೂಮಿ ಸಮಸ್ಯೆ ,ರೈತರ ಭೂಮಿ ಸಮೀಕ್ಷೆ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಗಳ ಕಾರ್ಯಾಚರಣೆ ಅವಧಿ ಹೆಚ್ಚಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜುಗೌಡ ( ನರಸಿಂಹ ನಾಯಕ), ಜಿಲ್ಲಾಧಿಕಾರಿ ಶ್ರೀಮತಿ ಸ್ನೇಹಲ್ ಆರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ ಆರ್ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್ ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!