ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದಲ್ಲಿ ಬಂಧನಕ್ಕೊಳಗಾಗಿರುವ 21 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದು ಗಡಿ ಭದ್ರತಾ ಪಡೆ (BSF)ಗೆ ಹಸ್ತಾಂತರಿಸಲು ಮಂಗಳೂರು ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ 30 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಂಧಿತರನ್ನು ಬಸ್ ಮೂಲಕ ಬೆಂಗಳೂರಿಗೆ ಕರೆದೊಯ್ದ ಬಳಿಕ, ಅಲ್ಲಿಂದ ರೈಲಿನಲ್ಲಿ ಪಶ್ಚಿಮ ಬಂಗಾಳದ ಮಾಲ್ದಾಗೆ ಕರೆದೊಯ್ಯಲಾಗುವುದು. ಮಾಲ್ದಾದಲ್ಲಿ ಅವರನ್ನು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಬಂಧಿತರನ್ನು ತಮ್ಮ ವಶಕ್ಕೆ ಪಡೆದುಕೊಂಡ ಬಳಿಕ ಬಿಎಸ್ಎಫ್ ತಂಡವು ನಿಯಮಾನುಸಾರ ಮುಂದಿನ ಕಾನೂನು ಕ್ರಮ ಹಾಗೂ ಗಡಿಪಾರು ಪ್ರಕ್ರಿಯೆಯನ್ನು ಕೈಗೊಳ್ಳಲಿದೆ. ಆಗಸ್ಟ್ 26ರೊಳಗೆ 21 ಮಂದಿಯನ್ನು ಬಿಎಸ್ಎಫ್ಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬಂಧಿತರನ್ನು ಮಂಗಳೂರಿನಿಂದ ಪಶ್ಚಿಮ ಬಂಗಾಳದವರೆಗೆ ಸುರಕ್ಷಿತವಾಗಿ ಕರೆದೊಯ್ಯುವ ಜವಾಬ್ದಾರಿಯನ್ನು ನಿಯೋಜಿತ ಪೊಲೀಸ್ ತಂಡ ನಿರ್ವಹಿಸಲಿದೆ.



