ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಎನ್ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ರಾಷ್ಟ್ರಪತಿ ಭೇಟಿಯಾದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಈ ಸುಳಿವನ್ನು ಬಲಪಡಿಸಿದೆ. ಭಾನುವಾರ ಅಥವಾ ಸೋಮವಾರದೊಳಗೆ ಸಂಪುಟ ಪುನರ್ ರಚನೆ ಪ್ರಕ್ರಿಯೆಗೆ ಚಾಲನೆ ನೀಡಲು ಸಮಯ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಖಾತೆ ಬದಲಾವಣೆ ಹಾಗೂ ಹೊಸ ಮುಖಗಳಿಗೆ ಮಣೆ?
ಈ ಹೊಸ ಬದಲಾವಣೆಯಲ್ಲಿ ಹಲವು ಹಿರಿಯ ಸಚಿವರು ಹಾಗೂ ಆರು ಮಂದಿ ರಾಜ್ಯಖಾತೆ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ. ಪ್ರಮುಖವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ (ಶಿಕ್ಷಣ ಇಲಾಖೆ) ವರ್ಗಾಯಿಸುವ ಚರ್ಚೆ ನಡೆದಿದೆ. ಇತ್ತ ಧರ್ಮೇಂದ್ರ ಪ್ರಧಾನ್ ಹಾಗೂ ಹರ್ದೀಪ್ ಸಿಂಗ್ ಪುರಿ ಅವರ ಸಚಿವ ಸ್ಥಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ತಜ್ಞರು ಮತ್ತು ವಲಸಿಗರಿಗೆ ಸಚಿವ ಸ್ಥಾನ?
ಆರ್ಬಿಐ ಮಾಜಿ ಗವರ್ನರ್ ಮತ್ತು ಪಿಎಂಒ ಮಾಜಿ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಅವರಿಗೆ ಪ್ರಮುಖ ಸಚಿವ ಸ್ಥಾನ ನೀಡುವ ಮೂಲಕ ಆಡಳಿತಕ್ಕೆ ಹೊಸ ವೇಗ ನೀಡಲು ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ, ಆಮ್ ಆದ್ಮಿ ಪಾರ್ಟಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತೊರೆದು ಎನ್ಡಿಎ ಸಖ್ಯ ಬೆಳೆಸಿರುವ ಪ್ರಮುಖ ಸಂಸದರಿಗೂ ಈ ಬಾರಿ ಸಚಿವ ಸ್ಥಾನದ ಅದೃಷ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ.



