ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ವೇಳೆ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ (BCCI) ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಸೇರಿದ್ದರು.
ವಾರಣಾಸಿಯ ಗಂಜಾರಿ, ರಜತಲಾಬ್ನಲ್ಲಿ ನಿರ್ಮಾಣವಾಗಲಿರುವ ಕ್ರಿಕೆಟ್ ಸ್ಟೇಡಿಯಂ ಅನ್ನು ಸುಮಾರು ₹450 ಕೋಟಿ ವೆಚ್ಚದಲ್ಲಿ 30 ಎಕರೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರಧಾನ ಮಂತ್ರಿಗಳ ಕ್ಷೇತ್ರದಲ್ಲಿರುವ ಕ್ರೀಡಾಂಗಣವು 30,000 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಕ್ರೀಡಾಂಗಣವು ಹಿಂದೂ ದೇವರಾದ ‘ಭಗವಾನ್ ಶಿವ’ನಿಂದ ಪ್ರೇರಿತವಾದ ವಿಷಯಾಧಾರಿತ ವಾಸ್ತುಶಿಲ್ಪವನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.