ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಲಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಆಗಸ್ಟ್ 2ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ಕೈ ನಾಯಕರ ಮಹತ್ವದ ಸಭೆ ನಡೆಯಲಿದೆ. ಈ ಕಾರಣಕ್ಕಾಗಿ ದಿಲ್ಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು ಅದೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರ ಭೇಟಿಯ ಕಾರ್ಯಕ್ರಮ ನಿಗದಿಪಡಿಸಿಕೊಂಡಿದ್ದಾರೆ. ಆಗಸ್ಟ್ 3 ರಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮತ್ತು ಸಿದ್ದರಾಮಯ್ಯ ಅವರ ನಡುವಿನ ಮಹತ್ವದ ಭೇಟಿ ನಡೆಯಲಿದೆ.
ಆಗಸ್ಟ್ 3ರಂದು ಬೆಳಗ್ಗೆ ಮೋದಿ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಭೇಟಿಯ ವೇಳೆ ಸಿದ್ದರಾಮಯ್ಯ ಅವರು ಕರ್ನಾಟಕದ ಯೋಜನೆಗಳಿಗೆ ಕೇಂದ್ರದ ಸರಕಾರವೂ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆ ಇದೆ. ಇದರ ಜತೆಗೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್ಟಿ ಪಾಲು, ಅನುದಾನ ಹಂಚಿಕೆಯಲ್ಲಿರುವ ತಾರತಮ್ಯಗಳ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.
ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ. ಮೈಸೂರು ದಸರಾದ ಸಂದರ್ಭ ಏರ್ ಶೋ ಆಯೋಜಿಸುವ ಬಗ್ಗೆ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಇದರ ಬಗ್ಗೆ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜತೆ ಚರ್ಚಿಸಲಿದ್ದಾರೆ.