ಇಂದು ಮಧ್ಯಪ್ರದೇಶ, ಛತ್ತೀಸ್‌ಗಢಕ್ಕೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದು, 50,700 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಛತ್ತೀಸ್‌ಗಢಕ್ಕೆ ಪಿಎಂ ಭೇಟಿ

ಇಂದು ಮಧ್ಯಾಹ್ನ 3:15ರ ಸುಮಾರಿಗೆ ಅವರು ಛತ್ತೀಸ್‌ಗಢದ ರಾಯ್‌ಗಢವನ್ನು ತಲುಪಲಿದ್ದು, 6,350 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

ಇದೇ ವೇಳೆ ಛತ್ತೀಸ್‌ಗಢದ ಒಂಬತ್ತು ಜಿಲ್ಲೆಗಳಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ. ಈ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಪ್ರಧಾನ ಮಂತ್ರಿ – ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ನಿರ್ಮಿಸಲಾಗುವುದು.

ಮಧ್ಯಪ್ರದೇಶಕ್ಕೆ ಪಿಎಂ ಭೇಟಿ

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ನ ಬಿನಾ ರಿಫೈನರಿಯಲ್ಲಿ ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್‌ನ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿಯವರು ನೆರವೇರಿಸಲಿದ್ದಾರೆ. ಇದು ಪ್ರಧಾನಮಂತ್ರಿಯವರ ‘ಆತ್ಮನಿರ್ಭರ ಭಾರತ’ದ ದೃಷ್ಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆಯಾಗಿದೆ.

ಈ ಅತ್ಯಾಧುನಿಕ ಸಂಸ್ಕರಣಾಗಾರವನ್ನು ಸುಮಾರು ರೂ. 49,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದೇ ವೇಳೆ ಪ್ರಧಾನಮಂತ್ರಿಯವರು ನರ್ಮದಪುರಂ ಜಿಲ್ಲೆಯಲ್ಲಿ ‘ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನಾ ವಲಯ’ ಎಂಬ ಹತ್ತು ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಯೋಜನೆಯನ್ನು ಸುಮಾರು 460 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇಂದೋರ್‌ನಲ್ಲಿರುವ ‘ಐಟಿ ಪಾರ್ಕ್ 3 ಮತ್ತು 4’ ಅನ್ನು ಸುಮಾರು 550 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಇದು ಐಟಿ ಮತ್ತು ಐಟಿಇಎಸ್ ವಲಯಕ್ಕೆ ಹೆಚ್ಚು ಉತ್ತೇಜನವನ್ನು ನೀಡುತ್ತದೆ.

ರಾಜ್ಯದಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿ ಮತ್ತು ಏಕರೂಪದ ಉದ್ಯೋಗಾವಕಾಶಗಳನ್ನು ಉತ್ತೇಜಿಸುವ ಗುರಿಯೊಂದಿಗೆ ಶಾಜಾಪುರ, ಗುನಾ, ಮೌಗಂಜ್, ಅಗರ್ ಮಾಲ್ವಾ, ನರ್ಮದಾಪುರಂ ಮತ್ತು ಮಕ್ಸಿಯಲ್ಲಿ ಸುಮಾರು 310 ಕೋಟಿ ರೂ.ಗಳ ವೆಚ್ಚದಲ್ಲಿ ಆರು ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!