ಹೊಸದಿಗಂತ ಡಿಜಿಟಲ್ ಡೆಸ್ಕ್ :
ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಅಂಗವಾಗಿ ಬಂಡೀಪುರಕ್ಕೆ ಆಗಮಿಸಿರುವ ಪ್ರಧಾನಿ ಮೋದಿ, ಬಂಡೀಪುರ ಹುಲಿಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದರು.
ಇಂದು ಬೆಳಿಗ್ಗೆ 7.35ರ ಸುಮಾರಿಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಬಳಿಕ 7.50ಕ್ಕೆ ತೆರೆದ ಜೀಪ್ನಲ್ಲಿ (ಬೊಲೆರೊ ಕ್ಯಾಂಪರ್) ಸಫಾರಿಗೆ ತೆರಳಿದರು.
ಸಫಾರಿಯಲ್ಲಿ 22 ಕಿ.ಮೀ ಸಂಚರಿಸಿ ಬಂಡೀಪುರದ ಅರಣ್ಯ, ಪ್ರಾಣಿ ಪಕ್ಷಿಗಳನ್ನು ವೀಕ್ಷಿಸಿದರು. ಈ ವೇಳೆ ಆನೆಗಳು, ಜಿಂಕೆಗಳು, ಕಾಟಿಗಳು ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳು ಎದುರಾದವು. ಆದರೆ ನಮಗೆ ಹುಲಿ ಕಾಣಿಸಲಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಮೋದಿ ಅವರಿದ್ದ ವಾಹನದ ಜೊತೆಗೆ ಆಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಫಾರಿಗೆ ತೆರಳಿದ್ದವು.
ಅರಣ್ಯದ ಕಚ್ಚಾ ರಸ್ತೆಯಲ್ಲೇ ಸಾಗಿ 9.50ಕ್ಕೆ ಕೆಕ್ಕನಹಳ್ಳ ಚೆಕ್ ಪೋಸ್ಟ್ಗೆ ಮೋದಿ ತಲುಪಿದರು. ಅಲ್ಲಿಂದ ತಮ್ಮ ವಾಹನದಲ್ಲಿ ತಮಿಳುನಾಡಿನ ಮಧುಮಲೆ ಹುಲಿಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು.