ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ‘ದೇಶದ ಕೋರ್ಟ್ ಕಲಾಪ, ಪ್ರತಿಯೊಂದು ಚಟುವಟಿಕೆಗಳಲ್ಲೂ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡುವ ಅಗತ್ಯವಿದೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಅಂಬೇಡ್ಕರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ದೇಶದ ನ್ಯಾಯಾಲಯಗಳ ಪ್ರತಿಯೊಂದು ಚಟುವಟಿಕೆಗಳೂ ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ಇರಬೇಕು. ಇದರ ದಿಸೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಎಲ್ಲ ಹೈಕೋರ್ಟ್ಗಳ ನ್ಯಾಯಮೂರ್ತಿಗಳ ಜತೆ ಮಾತುಕತೆ ನಡೆಸಿದ್ದೇನೆ’ ಎಂದು ತಿಳಿಸಿದ್ದಾರೆ.
ಸಂಸ್ಕೃತಿ, ಭಾಷೆ, ಸಂಪ್ರದಾಯವನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯುವುದು ಪ್ರಧಾನಿಮೋದಿ ಅವರ ಆದ್ಯತೆಯಾಗಿದೆ. ಅದರಂತೆ, ನ್ಯಾಯಾಲಯಗಳಲ್ಲೂ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕಿದೆ. ಇದರಿಂದ ಸ್ಥಳೀಯ ಭಾಷೆಗಳಿಗೆ ಉತ್ತೇಜನ ಸಿಕ್ಕಂತಾಗುತ್ತದೆ ಎಂದಿದ್ದಾರೆ.