ಪ್ರಿಯಾಂಕಾ ಗಾಂಧಿ ವಾದ್ರಾ ಹೆಗಲಿಗೆ ಮಹತ್ವದ ಜವಾಬ್ದಾರಿ ನೀಡಿದ ಕಾಂಗ್ರೆಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೊದಲ ಬಾರಿಗೆ ಸಂಸದರಾಗಿ ಲೋಕಸಭೆಗೆ ಆಯ್ಕೆಯಾದ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಗಲ ಮೇಲೆ ದೊಡ್ಡ ಜವಾಬ್ದಾರಿಯನ್ನು (JPC) ಹೊರಿಸಲಾಗಿದೆ.

ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಯನ್ನು ಜಾರಿ ತರಲು ಮುಂದಾಗಿದೆ. ಈ ಸಂಬಂಧ ಮಸೂದೆಯನ್ನೂ ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

ಅಲ್ಲದೆ, ಇದನ್ನು ಪರಿಗಣಿಸಲು ಜಂಟಿ ಸಂಸದೀಯ ಸಮಿತಿಯನ್ನು ಸಹ ರಚಿಸಲಾಗುತ್ತದೆ. ಇದಕ್ಕಾಗಿ ಸದಸ್ಯರ ಪಟ್ಟಿಯನ್ನು ನೀಡುವಂತೆ ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದ್ದು, ಕಾಂಗ್ರೆಸ್ ನಾಲ್ಕು ಹೆಸರುಗಳನ್ನು ನೀಡಿದೆ. ಕಾಂಗ್ರೆಸ್ ನೀಡಿರುವ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನೂ ಸೇರಿಸಲಾಗಿದೆ.

ಕಾಂಗ್ರೆಸ್ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಮನೀಶ್ ತಿವಾರಿ, ಸುಖದೇವ್ ಭಗತ್ ಮತ್ತು ರಣದೀಪ್ ಸುರ್ಜೆವಾಲಾ ಅವರು ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯಲ್ಲಿ (ಜೆಪಿಸಿ) ಪಕ್ಷವನ್ನು ಪ್ರತಿನಿಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಸೂದೆಯನ್ನು ಮಂಡಿಸಿದ ನಂತರ ಕೇಂದ್ರ ಸರ್ಕಾರ ಜೆಪಿಸಿಗೆ ಶಿಫಾರಸು ಮಾಡಿದ್ದರೂ, ಸ್ಪೀಕರ್ ಓಂ ಬಿರ್ಲಾ ಅವರು ಅದನ್ನು ಇನ್ನೂ ಅಂತಿಮಗೊಳಿಸಿಲ್ಲ. ಸರ್ಕಾರ ಡಿಸೆಂಬರ್ 20 ರಂದು ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿಯುವ ಮೊದಲು ಸಮಿತಿ ಅಂತಿಮಗೊಳಿಸುವ ಸಾಧ್ಯತೆ ಇದೆ.

ಸಮಿತಿಯು ಲೋಕಸಭೆಯಿಂದ 21 ಸದಸ್ಯರು ಮತ್ತು ರಾಜ್ಯಸಭೆಯಿಂದ 10 ಸದಸ್ಯರನ್ನು ಒಳಗೊಂಡಿರುತ್ತದೆ.

ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಲ್ಯಾಣ್ ಬ್ಯಾನರ್ಜಿ ಅವರನ್ನು ಜೆಪಿಸಿಗೆ ನಾಮನಿರ್ದೇಶನ ಮಾಡುತ್ತದೆ ಮತ್ತು ಡಿಎಂಕೆಯಿಂದ ಪಿ ವಿಲ್ಸನ್ ಹಾಗೂ ಸಮಾಜವಾದಿ ಪಕ್ಷದಿಂದ(ಎಸ್‌ಪಿ) ಧರ್ಮೇಂದ್ರ ಯಾದವ್ ಅವರು ಸಮಿತಿಯ ಭಾಗವಾಗಲಿದ್ದಾರೆ ಎಂದು ತಿಳಿದುಬಂದಿದೆ.

ಸಂವಿಧಾನ(129 ನೇ ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಮಂಗಳವಾರ ಮಂಡಿಸಿದರು. ಸುಮಾರು 90 ನಿಮಿಷಗಳ ಚರ್ಚೆಯ ನಂತರ ಮಸೂದೆಯನ್ನು ಮತಕ್ಕೆ ಹಾಕಲಾಯಿತು. 269 ​​ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 198 ಸದಸ್ಯರು ಮಸೂದೆಯ ವಿರುದ್ಧ ಮತ ಚಲಾಯಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!