ಹೊಸದಿಗಂತ ವರದಿ,ಅಂಕೋಲಾ:
ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ನಿರ್ಬಂಧಸಿ ಹಸಿರು ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದ್ದು ಈ ಕುರಿತು ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಚ್. ಹಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಪಾಲ್ಗೊಂಡು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ ಕಾಳಿ ಮತ್ತಿತರ ನದಿಗಳಿಂದ ಮರಳು ತೆಗೆಯಲು ಕಾನೂನಿನ ತೊಡಕನ್ನು ಮುಂದಿಡಲಾಗುತ್ತಿದೆ, ಮರಳು ಇಲ್ಲದೇ ಸರ್ಕಾರದಿಂದ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.
ಸರ್ಕಾರದಿಂದ ಮಂಜೂರಾದ ಮನೆಗಳ ನಿರ್ಮಾಣಕ್ಕೆ ಮರಳು ಸಿಗದ ಪರಿಸ್ಥಿತಿ ಉಂಟಾಗಿದ್ದು ಬಡ ಜನರು ಮನೆ ಕಟ್ಟಲು ಸಾಧ್ಯವಾಗುತ್ತಿಲ್ಲ ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕಿದೆ ಮತ್ತು ಸಮಸ್ಯೆಗೆ ಶೀಘ್ರ ಪರಿಹಾರ ಕಂಡು ಹಿಡಿಯಬೇಕಾಗಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಸಭೆಯಲ್ಲಿ ತಿಳಿಸಿದರು.
ಮೀನುಗಾರಿಕೆ ಸಚಿವ ಎಸ್. ಅಂಗಾರ, ಇಂಧನ ಸಚಿವ ಸುನೀಲಕುಮಾರ್ ಮೊದಲಾದವರು ಪಾಲ್ಗೊಂಡು ಚರ್ಚೆ ನಡೆಸಿದರು.