ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಕವಿ, ಸಾಹಿತಿ, ನಾಟಕಕಾರ, ಪ್ರೊ. ಚಂದ್ರಶೇಕರ್ (83) ಪಾಟೇಲ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ ಪಾಟೀಲ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾಹಿತ್ಯ ಲೋಕದಲ್ಲಿ ಚಂಪಾ ಎಂದೇ ಪ್ರಖ್ಯಾತರಾಗಿದ್ದರು ಸಾಹಿತಿ ಚಂದ್ರಶೇಖರ ಪಾಟೀಲ್. ಇಂಗ್ಲಿಷ್ ನಲ್ಲಿ ಎಂ ಎ ಪದವಿ ಪಡೆದು, ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ಭಾಷಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕರ್ನಾಟಕ ವಿವಿಯಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದರು.
ಅಷ್ಟೇ ಅಲ್ಲದೆ ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚಿಸುವಲ್ಲಿ ಪ್ರಸಿದ್ಧಿ ಹೊಂದಿದ್ದರು. ಅವರ ನಾಟಕಗಳು ದೇಶ ವಿದೇಶಗಳಲ್ಲೂ ಪ್ರದರ್ಶನಗೊಳ್ಳುತ್ತಿದ್ದವು. ಇಂಗ್ಲಿಷ್ ಹೊರತಾಗಿ ʼಸಂಕ್ರಮಣʼ ಸಾಹಿತ್ಯ ಪತ್ರಿಕೆಯ ಸಂಪಾದಕರು ಹಾಗೂ ಪ್ರಕಾಶಕರಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಇವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ.
1/3 pic.twitter.com/MahFYOn3Aq— Basavaraj S Bommai (@BSBommai) January 10, 2022
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) January 10, 2022