ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೈಕೋರ್ಟ್ (High Court) ಒಪ್ಪಿಗೆ ಸೂಚಿಸಿದೆ.
ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿತ್ತು.
ಇದಾದ ಬಳಿಕ ಡಿಕೆ ಶಿವಕುಮಾರ್, ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಿ ವರಾಳೆ ಮತ್ತು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿ ಗುರುದೇವ್ ಸಿಂಗ್ ಮತ್ತು ಪಂಜಾಬ್ ಸರ್ಕಾರದ ಪ್ರಕರಣವನ್ನು ಉಲ್ಲೇಖಿಸಿತು. ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ. ಸಂಪುಟದ ನಿರ್ಧಾರವನ್ನು ಸಿಬಿಐ ಸೇರಿದಂತೆ ಯಾರು ಬೇಕಾದರೂ ಪ್ರಶ್ನಿಸಬಹುದು. ನಂತರ ಅರ್ಜಿಯನ್ನು ಪರಿಗಣಿಸಿ ಮುಂದುವರೆಯಬೇಕಾ ಬೇಡವಾ ಅಂತ ನಿರ್ಧಾರ ಮಾಡಲಾಗುತ್ತದೆ ಎಂದು ಪೀಠ ಹೇಳಿದೆ.
ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ, ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ್ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ಪೀಠ, ಮೇಲ್ಮನವಿ ಹಿಂಪಡೆಯುವುದಕ್ಕೆ ಅನುಮತಿ ನೀಡಿತು.
ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ಸಲ್ಲಿಸಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿದ್ದರು. ಇದರ ವಿಚಾರಣೆಯೂ ಇಂದು ನಡೆಯಿತು. ಆದರೆ, ಡಿಕೆ ಶಿವಕುಮಾರ್ ಮೇಲ್ಮನವಿಯನ್ನು ವಾಪಸ್ ಪಡೆದಿರುವ ಹಿನ್ನೆಲೆ ಯತ್ನಾಳ ಸಲ್ಲಿಸಿದ್ದ ಆಕ್ಷೇಪ ಅರ್ಜಿ ಅನೂರ್ಜಿತಗೊಂಡಿತು.
ಸಿಬಿಐ, ಯತ್ನಾಳ್ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ ಪೀಠ, ಇಲ್ಲಿಯವರೆಗೂ ಸರ್ಕಾರದ ಕ್ರಮವನ್ನು ಯಾರೂ ಪ್ರಶ್ನಿಸಿಲ್ಲ. ಕಾಜಿ ಲೆಂಡಪ್ ದೋರ್ಜಿ ಪ್ರಕರಣದಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾಗಿತ್ತು. ಆದರೆ ಇಲ್ಲಿ ಈವರೆಗೂ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿಲ್ಲ ಎಂದು ಹೇಳಿದೆ.