ದಿಗಂತ ವರದಿ ಶಿವಮೊಗ್ಗ:
ರಾಜ್ಯ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತೆರಿಗೆ ಹೆಚ್ಚಿಸಿ, ಇಂದನ ಬೆಲೆ ಏರಿಕೆ ಕಾರಣ ಆಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಶೋಕ ವೃತ್ತದಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಹಾಕಿದೆ. ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆ ಆಗಲಿದೆ. ಇದು ಜನ ಸಾಮಾನ್ಯರ ಜೀವನದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಕೂಡಲೇ ಇಂ‘ನ ಬೆಲೆ ಏರಿಕೆಯನ್ನು ವಾಪಾಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಬಂಧಿಸಿದ ವಾಹನಕ್ಕೂ ತಡೆ…!
ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಮ್ಮ ವಾಹನಕ್ಕೆ ಹತ್ತಿಸಿ ಕರೆದೊಯ್ಯಲು ಮುಂದಾದರು. ಇದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಪೊಲೀಸ್ ವಾಹನಕ್ಕೂ ತಡೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಸುಮಾರು ನಾಲ್ಕು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು.
ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೋಹನ್ ರೆಡ್ಡಿ, ಸುರೇಖಾ ಮುರುಳೀಧರ್, ಅನಿತಾ ರವಿಶಂಕರ್, ದರ್ಶನ್, ರಾಹುಲ್ ಬಿದರೆ, ಮಾಲತೇಶ್ ಇನ್ನಿತರರು ಇದ್ದರು.