ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಸಷನ್ಗೆ ಅನುಮತಿ ನೀಡಿದ್ದರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ಪ್ರತಿಭಟನೆಯ ಕಾವು ಹೆಚ್ಚಾಗುವಂತಹ ಸಾಧ್ಯತೆಗಳು ಕೂಡ ಇದೆ. ಹಾಗಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಬೆಂಗಳೂರು ನಗರದಾದ್ಯಂತ ಸಾಕಷ್ಟು ಕಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆಯಾ ವಿಭಾಗದ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ನಗರದಾದ್ಯಂತ ಪ್ರತಿಭಟನೆ ನಡೆಸಿದರೆ ಸಹಜವಾಗಿಯೇ ಲಾ ಅಂಡ್ ಆರ್ಡರ್ ಹದಗೆಡುವ ಸಾಧ್ಯತೆ ತೀರ ಹೆಚ್ಚಿದೆ. ಹೀಗಾಗಿ ಪ್ರತಿಭಟನೆಯನ್ನ ಹತ್ತಿಕ್ಕಲು ಪೊಲೀಸರೂ ಕೂಡ ಮುಂದಾಗಿದ್ದಾರೆ. ಸಭೆ ನಡೆಸಿದ ಪೊಲೀಸ್ ಆಯುಕ್ತರು ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿ ಯಾವ ಭಾಗದಲ್ಲಿ ಹೆಚ್ಚು ಪ್ರತಿಭಟನೆ ಸಾಧ್ಯತೆ ಇದೆಯೋ ಅಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜನೆ ಮಾಡಲು ಸೂಚನೆ ನೀಡಿದ್ದಾರೆ.
ಈಗಾಗಲೆ ಕಾಂಗ್ರೆಸ್ ಮುಖಂಡರು, ಬ್ಲಾಕ್ ವೈಸ್ ಮುಖಂಡರ ಜೊತೆ ಆಯಾ ವಿಭಾಗದ ಡಿಸಿಪಿಗಳು ಚರ್ಚೆಯನ್ನ ನಡೆಸಿದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದ ಹಿನ್ನಲೆ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ ಎಂದು ಅವರಿಗೆ ತಿಳಿ ಹೇಳಲಾಗಿದೆ. ಅಷ್ಟೇ ಅಲ್ಲದೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ ಅವಕಾಶವಿದ್ದು ಅಲ್ಲಿ ಪ್ರತಿಭಟನೆ ಮಾಡಬಹುದು ಎಂದು ಸೂಚನೆ ನೀಡಿದ್ದಾರೆ.
ಇನ್ನು ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ಮಾಡುತ್ತಿರುವುದರಿಂದ ಪೊಲೀಸರೂ ಕೂಡ ಎಲ್ಲೆಂದರಲ್ಲಿ ಪ್ರತಿಭಟನೆಯನ್ನ ಹತ್ತಿಕ್ಕಲು ಹರಸಾಹಸ ಪಡಬೇಕಾಗಿದೆ. ಆದರೆ ಕೋರ್ಟ್ ಆದೇಶ ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲೇಬೇಕಾಗಿದೆ.