ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾರ್ಜಿಲಿಂಗ್ನಲ್ಲಿ ನಡೆದ ಅಂತಾರಾಷ್ಟ್ರೀಯ ಸಂತಾಲ್ ಸಮಾವೇಶದ ಸಂದರ್ಭದಲ್ಲಿ ಉಂಟಾದ ಪ್ರೋಟೋಕಾಲ್ ವಿವಾದದ ಹಿನ್ನೆಲೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರವಾದ ವರದಿ ಕೇಳಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಇಂದು ಸಂಜೆ 5 ಗಂಟೆಯೊಳಗೆ ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಸಂತಾಲ್ ಸಮಾವೇಶದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ ಕಾರ್ಯಕ್ರಮಕ್ಕೆ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ರಾಜ್ಯದ ಯಾವುದೇ ಸಚಿವರು ಹಾಜರಾಗಿರಲಿಲ್ಲ ಎನ್ನುವುದು ವಿವಾದಕ್ಕೆ ಕಾರಣವಾಯಿತು.
ಇದನ್ನೂ ಓದಿ:
ಈ ಕುರಿತು ಮಾತನಾಡಿದ ರಾಷ್ಟ್ರಪತಿ ಮುರ್ಮು, ಕಾರ್ಯಕ್ರಮದ ಸ್ಥಳವನ್ನು ಕೊನೆಯ ಕ್ಷಣದಲ್ಲಿ ಬದಲಾಯಿಸಿರುವುದು ಮತ್ತು ಸರಿಯಾದ ವ್ಯವಸ್ಥೆಗಳು ಕಾಣದಿರುವುದು ತಮಗೆ ಆಶ್ಚರ್ಯ ತಂದಿದೆ ಎಂದು ತಿಳಿಸಿದ್ದಾರೆ. ನಾನು ಕೂಡ ಬಂಗಾಳದ ಮಗಳು; ಮಮತಾ ಬ್ಯಾನರ್ಜಿ ನನಗೆ ತಂಗಿಯಂತವರು. ಅವರು ಅಥವಾ ಅವರ ಸಚಿವರು ಏಕೆ ಬರಲಿಲ್ಲ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಟಿಎಂಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ರಾಷ್ಟ್ರಪತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡ ಟಿಎಂಸಿ ವರ್ತನೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.



