ಹೊಸದಿಗಂತ ಜಿಜಿಟಲ್ ಡೆಸ್ಕ್:
ಪಂಜಾಬ್ ನ ಆಮ್ ಆದ್ಮಿ ಸರ್ಕಾರದಲ್ಲಿ ಕಮಿಷನ್ ವಿಚಾರ ಸದ್ದು ಮಾಡಿದೆ. ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಸಚಿವ ಸಂಪುಟದಿಂದ ವಜಾ ಮಾಡಿದ್ದಾರೆ.
ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಸಚಿವರ ಮೊದಲ ತಲೆದಂಡವಾಗಿದ್ದು, ಸಂಪುಟದಿಂದ ಕಿತ್ತು ಹಾಕುತ್ತಿದ್ದಂತೆ ಪಂಜಾಬ್ ಪೊಲೀಸರು ಸಚಿವರನ್ನು ಬಂಧಿಸಿದ್ದಾರೆ.
ತಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದ ಅಧಿಕಾರಿಗಳಿಂದ ವಿಜಯ್ ಸಿಂಗ್ಲಾ ಶೇ.1ರಷ್ಟು ಕಮಿಷನ್ ಕೇಳಿದ್ದರು. ಈ ಕುರಿತಾಗಿ ಸಿಎಂ ಭಗವಂತ್ ಮಾನ್ ಅವರಿಗೆ ದೂರು ಬಂದಿತ್ತು. ಅಲ್ಲದೇ, ಬಲವಾದ ಸಾಕ್ಷ್ಯ ಕೂಡ ಲಭ್ಯವಾಗಿತ್ತು. ಆದ್ದರಿಂದ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮೆಚ್ಚುಗೆ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಭಗವಂತ್ ನಿಮ್ಮ ಬಗ್ಗೆ ಹೆಮ್ಮೆ ಇದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
‘ನಿಮ್ಮ ಬಗ್ಗೆ ಹೆಮ್ಮೆ ಇದೆ. ನೀವು ತೆಗೆದುಕೊಂಡಿರುವ ನಿರ್ಧಾರ ನನ್ನ ಕಣ್ಣಲ್ಲಿ ನೀರು ತರಿಸಿದೆ. ಆಮ್ ಆದ್ಮಿ ಪಕ್ಷದ ಬಗ್ಗೆ ಇಡೀ ದೇಶವೇ ಹಮ್ಮೆ ಪಡುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
Proud of you Bhagwant. Ur action has brought tears to my eyes.
Whole nation today feels proud of AAP https://t.co/glg6LxXqgs
— Arvind Kejriwal (@ArvindKejriwal) May 24, 2022
ವಿಶೇಷವೆಂದರೆ 2015ರಲ್ಲಿ ದೆಹಲಿಯಲ್ಲಿ ಕೇಜ್ರಿವಾಲ್ ಸಹ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಬೆನ್ನಲ್ಲೇ ಅವರನ್ನ ನೇರವಾಗಿ ವಜಾಗೊಳಿಸಿದ್ದರು. ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಿನಿಂದಲೂ ಭಗವಂತ್ ಮಾನ್ ಜನಸ್ನೇಹಿ ಹೊಸ ಹೊಸ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.