ಹೊಸದಿಗಂತ ವರದಿ, ಮಂಗಳೂರು:
ದೇಶದಲ್ಲಿ ಸೌಹಾರ್ದತೆಯ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬ ಪ್ರಜೆಯೂ ಆದ್ಯತೆ ನೀಡಬೇಕು. ದೇಶಕ್ಕಾಗಿ ಕೆಲಸ ಮಾಡುವುದರೊಂದಿಗೆ ದೇಶವೇ ಮೊದಲ ಆದ್ಯತೆಯಾಗಬೇಕು ಎಂಬ ನಿಟ್ಟಿನಲ್ಲಿ ಸಾಗಬೇಕು ಎಂದು ಉಪರಾಷ್ಟ್ರಪತಿ ಜಗ್ದೀಪ್ ಧನಕ್ ಕರೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯ ಹಾಗೂ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ ಮತ್ತು 2024-25ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನದೀಪ’ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಆಧ್ಯಾತ್ಮಿಕತೆಯ ತವರೂರಾಗಿದ್ದು, ಇತರ ದೇಶಗಳಿಗೆ ಮಾದರಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಮಾದರಿ ಕಾರ್ಯಕ್ರಮಗಳಾಗುತ್ತಿವೆ ಎಂದರು.
ಭಾರತ ವೇಗಗತಿಯಲ್ಲಿ ಪ್ರಗತಿ ಕಾಣುತ್ತಿದೆ. ಜಗತ್ತೇ ನಮ್ಮ ದೇಶವನ್ನು ವಿಸ್ಮಯದಿಂದ ನೋಡುತ್ತಿದೆ. ಈ ನಡುವೆ ದೇಶದ ಅಭಿವೃದ್ಧಿಯನ್ನು ಸಹಿಸದ ಕೆಲವು ದೇಶ ವಿರೋಧಿ ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರಿತು ಎಚ್ಚರ ಅತ್ಯಗತ್ಯ ಎಂದು ಉಪರಾಷ್ಟ್ರಪತಿ ಎಚ್ಚರಿಸಿದರು.
ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಡಾ.ಸುಧೇಶ್ ಧನ್ಕರ್, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಅಧ್ಯಕ್ಷೆ ಡಾ.ಹೇಮಾವತಿ ವಿ. ಹೆಗ್ಗಡೆ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.