February 25, 2026
Wednesday, February 25, 2026
spot_img

ಭರ್ಜರಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು: 106 ಕೆಜಿ ಗಾಂಜಾ ಸಹಿತ ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಪುತ್ತೂರು:

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜ.19ರಂದು ಸಂಜೆ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು.

ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಯಿತು.

ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ವಾಹನ ಪರಿಶೀಲನೆಯಲ್ಲಿ ಒಟ್ಟು 73 ಕಟ್ಟು 106 ಕಿಲೋ 60 ಗ್ರಾಂ ತೂಕದ ಗಾಂಜಾ ಪತ್ತೆಯಾಯಿತು. ವಶಪಡಿಸಿಕೊಂಡ ಗಾಂಜಾದ ಮೌಲ್ಯ ರೂ. 53.03 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿಚಾರಣೆಯಲ್ಲಿ, ಈ ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ.

ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಗೂಡ್ಸ್ ವಾಹನ, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 09/2026, ಕಲಂ 8(c), 20(b)(ii)C NDPS Act-19850 ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರೊಂದಿಗೆ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್‌, ಸುಬ್ರಮಣಿ ಹಾಗೂ ವಿನೋದ್ ಅವರುಗಳು ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !